ಬೆಂಗಳೂರು: ಸರ್ಕಾರಿ ಭೂಮಿಯ ಡಿ ನೋಟಿಫಿಕೇಷನ್ ಹಗರಣದಲ್ಲಿ ಆರೋಪಿಗಳಾಗಿರುವ ಯಡಿಯೂರಪ್ಪ ಅವರ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಆರ್.ಎನ್.ಸೋಹನ್ಕುಮಾರ್ ಹಾಗೂ ಶಾಸಕ ಡಾ.ಡಿ.ಹೇಮಚಂದ್ರ ಸಾಗರ್ ಸೇರಿದಂತೆ ಇತರ ಆರೋಪಿಗಳಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ನೀಡಿರುವ ಕ್ರಮವನ್ನು ಪ್ರಶ್ನಿಸಿ ವಕೀಲ ಸಿರಾಜಿನ್ ಬಾಷಾ ಬುಧವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು.
ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಬಾಷಾ ಅವರು ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿದ್ದಾರೆ.
ವಕೀಲರಾದ ಸಿರಾಜಿನ್ ಬಾಷಾ ಅವರು ಸಲ್ಲಿಸಿರುವ ಎರಡು ಮತ್ತು ಮೂರನೇ ಖಾಸಗಿ ದೂರುಗಳಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯವು ಯಡಿಯೂರಪ್ಪ ಮತ್ತು ಕೃಷ್ಣಯ್ಯ ಶೆಟ್ಟಿ ಅವರಿಗೆ ಜಾಮೀನು ನಿರಾಕರಿಸಿ ಅವರನ್ನು ಇದೇ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಇದೇ ವೇಳೆ ನ್ಯಾಯಾಲಯವು ಹಗರಣದಲ್ಲಿ ಭಾಗಿಗಳಾದ ಯಡಿಯೂರಪ್ಪ ಅವರ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಆರ್.ಎನ್.ಸೋಹನ್ಕುಮಾರ್, ಶಾಸಕ ಡಾ.ಡಿ.ಹೇಮಚಂದ್ರ ಸಾಗರ್ ಸೇರಿದಂತೆ ಎರಡೂ ಪ್ರಕರಣಗಳ ಉಳಿದ 22 ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.