ನವದೆಹಲಿ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಯೂರೋಪ್ ಒಕ್ಕೂಟದ ಸಾಲದ ಬಿಕ್ಕಟ್ಟು ದೇಶದ ಆರ್ಥಿಕ ವೃದ್ಧಿ ದರದ ಮೇಲೆ (ಜಿಡಿಪಿ) ತೀವ್ರ ಪರಿಣಾಮ ಬೀರುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.
`ಆದರೆ, ದೇಶದ ಆರ್ಥಿಕ ಅಡಿಗಲ್ಲು ಸ್ಥಿರವಾಗಿದೆ. ಯಾವುದೇ ಜಾಗತಿಕ ಬೆಳವಣಿಗೆಗಳನ್ನು ತಾಳಿಕೊಳ್ಳುವ ಸಾಮರ್ಥ್ಯ ನಮ್ಮ ಆರ್ಥಿಕತೆಗೆ ಇದೆ ಎಂದು ಅವರು ಶನಿವಾರ ಇಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ (ಎನ್ಡಿಸಿ) ಸಭೆಯಲ್ಲಿ ಅಭಿಪ್ರಾಯಪಟ್ಟರು.
ದೇಶವು ಗರಿಷ್ಠ ಮಟ್ಟದಲ್ಲಿ ಉದಾರೀಕರಣಕ್ಕೆ ತೆರೆದುಕೊಂಡಿದೆ. ಇದರಿಂದ ಜಗತ್ತಿನ ಯಾವುದೇ ಭಾಗದಲ್ಲಿ ಸಮಸ್ಯೆಗಳು ಕಾಣಿಸಿಕೊಂಡರೂ, ಅದು ನಮ್ಮ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ. `ವಿಶ್ವ ಸೀನಿದರೆ ಭಾರತಕ್ಕೆ ನೆಗಡಿ ಬರುತ್ತದೆ~ ಎನ್ನುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯನ್ನು `ಜಿಡಿಪಿ~ಯ ಶೇ 4.6ಕ್ಕೆ ಇಳಿಸುವ ಗುರಿಯನ್ನು ಸರ್ಕಾರ ಹೊಂದಿತ್ತು. ಆದರೆ, ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಗುರಿ ತಲುಪಲು ಗರಿಷ್ಠ ಪ್ರಯತ್ನದ ಅಗತ್ಯವಿದೆ ಎಂದು ಪ್ರಣವ್ ಹೇಳಿದ್ದಾರೆ.