ಕೋಲಾರ: ನಿಯಮಾನುಸಾರವಾಗಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ನಿಯಮ ಮೀರಿ ಕರ್ತವ್ಯ ನಿರ್ವಹಿಸುವಂತೆ ಜನಪ್ರತಿನಿಧಿಗಳು ಮತ್ತು ಮೇಲಧಿಕಾರಿಗಳ ಒತ್ತಡ ಹೆಚ್ಚಾಗುತ್ತಿದೆ. ಉದ್ಯೋಗಖಾತ್ರಿ ಯೋಜನೆ ಅಡಿಯಲ್ಲಿಯೂ ಅಕ್ರಮವಾಗಿ ಕೆಲಸ ಮಾಡುವಂಥ ಸನ್ನಿವೇಶಗಳನ್ನು ಸೃಷ್ಟಿಸಲಾಗುತ್ತಿದೆ. ಅದಕ್ಕೆ ಅಭಿವೃದ್ಧಿ ಅಧಿಕಾರಿಗಳನ್ನೆ ಹೊಣೆ ಮಾಡಲಾಗುತ್ತಿದೆ. ಹೀಗಾಗಿ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಅನುಷ್ಠಾನ ಇಲಾಖೆ ಸಿಬ್ಬಂದಿ ಕೂಡ ಕಾಮಗಾರಿಗಳ ಪರಿಶೀಲನೆ ನಡೆಸಲು ಬರುತ್ತಿಲ್ಲ. ಸಿಬ್ಬಂದಿ ಇರುವ ಸ್ಥಳಕ್ಕೆ ದಾಖಲೆಗಳನ್ನು ಹೊತ್ತು ತಿರುಗಬೇಕಾಗಿದೆ. ಕೆಲವು ಜನಪ್ರತಿನಿಧಿಗಳು ಕೇವಲ ಅಧಿಕಾರ ಚಲಾಯಿಸುತ್ತಾರೆಯೇ ಹೊರತು ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವುದಿಲ್ಲ ಎಂದು ದೂರಿದರು. ಸಮರ್ಪಕವಾಗಿ ಕಾರ್ಯನಿರ್ವಹಿಸಲು ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಮತ್ತು ರಕ್ಷಣೆ ಒದಗಿಸಬೇಕು. ಇಲ್ಲದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಿಡಿಓಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಆರ್.ಮಂಜುನಾಥ್, ಶ್ರೀನಾಥಗೌಡ, ಕೆ.ಎಂ.ವೇಣು, ಮಂಜುನಾಥ ಪ್ರಸಾದ್, ಲಕ್ಷ್ಮಿ, ಕಾಶಿನಾಥ, ಕಾಮತ್ ಇತರರು ನೇತೃತ್ವ ವಹಿಸಿದ್ದರು.