ರಾಜ್ಕೋಟ್ (ಗುಜರಾತ್) (ಪಿಟಿಐ): ಜುನಾಗಡ ಜಿಲ್ಲೆಯ ಭಾವನಾಥ್ ದೇವಾಲಯದಲ್ಲಿ ಭಾನುವಾರ ವಾರ್ಷಿಕ ಮಹಾಶಿವರಾತ್ರಿ ಜಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದ್ದು, ದುರ್ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಸೋಮವಾರ ಆದೇಶಿಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪ್ರೇಮ್ಜಿ ಮಕ್ವಾನಾ ಎಂಬಾತ ಸೋಮವಾರ
ಜುನಾಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ, ಈ ದುರಂತಕ್ಕೆ ರಾಜ್ಯ ಸರ್ಕಾರದ ಸಾರಿಗೆ ಇಲಾಖೆಗೆ ಸೇರಿದ ಎರಡು ಬಸ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯೇ ಕಾರಣ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜುನಾಗಡ ನಗರ ಮತ್ತು ಭಾವನಾಥ್ ದೇವಾಲಯದ ನಡುವೆ ಸಂಪರ್ಕ ಕಲ್ಪಿಸುವ ಪಂಜಾಂಕ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದೆ.
`ಅಪಘಾತದಿಂದಾಗಿ ವಾಹನಗಳ ಮತ್ತು ಜನರ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆತಂಕಿತರಾದ ಜನರು ಏಕಾಏಕಿ ಚದುರಲು ಆರಂಭಿಸಿದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತು~ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆಗೆ ಆದೇಶ: ಈ ಅವಘಡಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಗುಜರಾತ್ ಸರ್ಕಾರ ಆದೇಶಿಸಿದೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವರುಣ್ ಮಾರಿಯಾವರಿಗೆ ತನಿಖಾ ಸಮಿತಿಯ ನೇತೃತ್ವ ವಹಿಸಲಾಗಿದೆ.
ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಮತ್ತು ಜುನಾಗಡ ಪಾಲಿಕೆ ತಲಾ ಒಂದು ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ಧನ ಘೋಷಿಸಿವೆ.