ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಜುಲೈ 3ರಿಂದ 12ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.
ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜೂನ್ 2ರ ಒಳಗೆ ನಿಗದಿತ ಶುಲ್ಕವನ್ನು ಕಾಲೇಜುಗಳಲ್ಲಿ ಪಾವತಿಸಿ ಅರ್ಜಿ ಸಲ್ಲಿಸಬೇಕು. ಪ್ರತಿ ವಿಷಯಕ್ಕೆ ರೂ 84, ಮೂರು ಅಥವಾ ಅದಕ್ಕಿಂತ ಹೆಚ್ಚಿನ ವಿಷಯಗಳಿಗೆ 252 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
ಉತ್ತರ ಪತ್ರಿಕೆಗಳ ಛಾಯಾಪ್ರತಿ ಕೋರಿ ಅರ್ಜಿ ಸಲ್ಲಿಸಲು ಇದೇ 29 ಕಡೆಯ ದಿನ. ಪ್ರತಿ ವಿಷಯದ ಉತ್ತರ ಪತ್ರಿಕೆಯ ಛಾಯಾಪ್ರತಿ ಪಡೆಯಲು ರೂ 420 ಶುಲ್ಕ ಪಾವತಿಸಬೇಕು. ಮರು ಮೌಲ್ಯಮಾಪನ ಹಾಗೂ ಮರು ಎಣಿಕೆ ಕೋರಿ ಅರ್ಜಿ ಸಲ್ಲಿಸಲು ಜೂನ್ 4 ಕಡೆಯ ದಿನ. ಒಂದು ವಿಷಯದ ಮರು ಮೌಲ್ಯಮಾಪನಕ್ಕೆ 1,050 ರೂ. ಹಾಗೂ ಮರು ಎಣಿಕೆಗೆ 280 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಮರು ಮೌಲ್ಯಮಾಪನ, ಮರು ಎಣಿಕೆ ಹಾಗೂ ಛಾಯಾಪ್ರತಿ ಪಡೆಯುವುದಕ್ಕೆ ಸಂಬಂಧಿಸಿದ ಅರ್ಜಿಗಳು ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ದೊರೆಯುತ್ತವೆ. ನಿಗದಿತ ದಿನಾಂಕದ ನಂತರ ಬರುವ ಹಾಗೂ ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಆಯುಕ್ತೆ ವಿ.ರಶ್ಮಿ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿರುವ `ಬೆಂಗಳೂರು - ಒನ್~ ಕೇಂದ್ರಗಳಲ್ಲಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ, ಗುಲ್ಬರ್ಗ ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರಗಳಲ್ಲಿರುವ `ಕರ್ನಾಟಕ - ಒನ್~ ಕೇಂದ್ರಗಳಲ್ಲಿ ನಿಗದಿತ ಶುಲ್ಕದೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ನೀಡಬಹುದು.
ಇತರ ಜಿಲ್ಲೆಗಳ ವಿದ್ಯಾರ್ಥಿಗಳು ಕಾಲೇಜುಗಳಿಂದ ಅಥವಾ ಇಲಾಖೆಯ ವೆಬ್ಸೈಟ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಅಗತ್ಯ ಮಾಹಿತಿಗಳೊಂದಿಗೆ ಭರ್ತಿ ಮಾಡಿ, ನಿಗದಿತ ಶುಲ್ಕವನ್ನು ಇಲಾಖೆ ಒದಗಿಸುವ ಚಲನ್ ಮೂಲಕ ಪಾವತಿಸಿ, ಅದನ್ನು ಅರ್ಜಿಯೊಂದಿಗೆ ಲಗತ್ತಿಸಿ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಉಪ ನಿರ್ದೇಶಕರು (ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಕ್ರಾಸ್, ಮಲ್ಲೇಶ್ವರ, ಬೆಂಗಳೂರು - 560 012 ಈ ವಿಳಾಸಕ್ಕೆ ಕಳುಹಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.