ಬೆಂಗಳೂರು: ಸರ್ಕಾರದಿಂದ ಪರಿಹಾರ ಪಡೆದುಕೊಳ್ಳಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧನದಲ್ಲಿದ್ದ ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಪಂಚಲಿಂಗಯ್ಯ ಅವರಿಗೆ ಇಲ್ಲಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ಬನಶಂಕರಿ ಆರನೆಯ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಭೂಮಿ ಸ್ವಾಧೀನ ಮಾಡಿಕೊಳ್ಳುತ್ತಿದ್ದಾಗ ಪಂಚಲಿಂಗಯ್ಯ ಅವರು ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ತಮ್ಮದೆಂದು ತೋರಿಸಿದ್ದರು. ನಂತರ ಆ ಭೂಮಿಗೆ ಅವರು ಸರ್ಕಾರದಿಂದ ಪರಿಹಾರವನ್ನೂ ಪಡೆದಿದ್ದರು ಎಂಬುದು ಲೋಕಾಯುಕ್ತ ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಇದೇ 25ರಂದು ಬಂಧಿಸಲಾಗಿತ್ತು.
ಒಂದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಭದ್ರತೆ ಪಡೆದು ನ್ಯಾಯಾಲಯ ಜಾಮೀನು ನೀಡಿದೆ. ದಾಖಲೆಗಳನ್ನು ನಾಶಪಡಿಸಬಾರದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಕಚೇರಿಗಳಿಗೆ ಭೇಟಿ ನೀಡಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ಪಂಚಲಿಂಗಯ್ಯ ಅವರಿಗೆ ವಿಧಿಸಿದೆ.