ಬೆಂಗಳೂರು: ನಗರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕಾಗಿ ಜೆಡಿಎಸ್ ವತಿಯಿಂದ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಬೈಕ್ ಮೆರವಣಿಗೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಿದರು.
ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಕ್ಷೇತ್ರದ ಎಲ್ಲ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ತೆರೆದ ವಾಹನದಲ್ಲಿ ಮೆರವಣಿಗೆ ಹೊರಟ ಕುಮಾರಸ್ವಾಮಿ ಜೊತೆ ಪಕ್ಷದ ಮುಖಂಡ ಜಮೀರ್ ಅಹ್ಮದ್ ಹಾಗೂ ಚಿಕ್ಕಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಸಿ. ನಾರಾಯಣಗೌಡ ಇದ್ದರು.
ಕೆಂಪೇಗೌಡನಗರದಲ್ಲಿ ತೆರೆದ ವಾಹನದ ಮೂಲಕವೇ ಪ್ರಚಾರ ಭಾಷಣ ಮಾಡಿದ ಕುಮಾರಸ್ವಾಮಿ, `ಬೆಂಗಳೂರು ನಗರಕ್ಕೆ ವಿಶೇಷ ಸವಲತ್ತು ಒದಗಿಸಲು ಜೆಡಿಎಸ್ ಬದ್ಧವಾಗಿದ್ದು, ಅಧಿಕಾರಕ್ಕೆ ಬಂದರೆ ರಾಜಧಾನಿಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳ ವಿವರವುಳ್ಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು' ಎಂದು ಹೇಳಿದರು.
`ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಉತ್ತಮ ಆಡಳಿತ ನೀಡಲು ಜೆಡಿಎಸ್ ಪರ್ಯಾಯವಾಗಿದೆ' ಎಂದು ಹೇಳಿದರು. `ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ' ಎಂದು ತಿಳಿಸಿದರು. ಸಾವಿರಾರು ಜೆಡಿಎಸ್ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ರ್ಯಾಲಿ ಹಿನ್ನೆಲೆಯಲ್ಲಿ ಬಸವನಗುಡಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.