ಹಾಸನದ ಜೈನ ಸಮಾಜದವರು ಆಯೋಜಿಸಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. `ಜೈನರು ಶಾಂತಿ ಪ್ರಿಯರು. ಕನ್ನಡ ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಜೈನರ ಕೊಡುಗೆಯನ್ನು ಮರೆಯಲಾಗುವುದಿಲ್ಲ. ಅನೇಕ ಜೈನ ಅರಸರು ನಾಡಿಗೆ ಹೆಮ್ಮೆ ತಂದಿದ್ದಾರೆ. ಆದರೆ ಇಂದಿನ ಸರ್ಕಾರ ಈ ಸಮುದಾಯವನ್ನು ಕಡೆಗಣಿಸುತ್ತಿದೆ. ಜೈನ ಸಮುದಾಯದವರೆಲ್ಲ ಶ್ರೀಮಂತರಲ್ಲ. ಅನೇಕ ಯುವಕರು ನಿರುದ್ಯೋಗಿಗಳಾಗಿ ಬೀದಿಗೆ ಬೀಳುವ ಸ್ಥಿತಿಯಲ್ಲಿದ್ದಾರೆ. ಮೀಸಲಾತಿ ಕಲ್ಪಿಸಿದಲ್ಲಿ ಅವರಿಗೆ ಅನುಕೂಲವಾಗುತ್ತದೆ. ಸಮುದಾಯದ ಯಾವುದೇ ಕಾರ್ಯಕ್ರಮಕ್ಕೂ ಸರ್ಕಾರ ಅನುದಾನ ನೀಡುತ್ತಿಲ್ಲ. ಇಂಥ ಹತ್ತು ಹಲವು ಸಮಸ್ಯೆಗಳನ್ನು ಸಮುದಾಯ ಎದುರಿಸುತ್ತಿದೆ. ರಾಜ್ಯದಲ್ಲಿ ಸಮುದಾಯಕ್ಕೆ ಸೇರಿದ 16 ಲಕ್ಷ ಜನರಿದ್ದು, ಮಾರ್ಚ್ 22ರೊಳಗೆ ಬೇಡಿಕೆ ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದರು.