ನವದೆಹಲಿ: ಜೈನ ಸಮಾಜಕ್ಕೆ ಅಲ್ಪ ಸಂಖ್ಯಾತ ಸಮುದಾಯದ ಮಾನ್ಯತೆ ನೀಡುವ ಸಂಬಂಧ ಕೇಂದ್ರ ಸಂಪುಟ ಶೀಘ್ರ ತೀರ್ಮಾನ ಕೈಗೊಳ್ಳಲಿದೆ.
ಜೈನ ಸಮಾಜಕ್ಕೆ ಅಲ್ಪಸಂಖ್ಯಾತ ಸಮುದಾಯದ ಸ್ಥಾನಮಾನ ನೀಡಬೇಕೆಂಬ ಶಿಫಾರಸನ್ನು ಸಚಿವ ಸಂಪುಟಕ್ಕೆ ಕಳುಹಿಸಲಾಗಿದ್ದು, ಒಂದೆರಡು ವಾರದಲ್ಲಿ ತೀರ್ಮಾನ ಆಗಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ. ರೆಹಮಾನ್ಖಾನ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕರ್ನಾಟಕ ಸೇರಿದಂತೆ ಹನ್ನೊಂದು ರಾಜ್ಯಗಳಲ್ಲಿ ಜೈನ ಸಮಾಜಕ್ಕೆ ಅಲ್ಪಸಂಖ್ಯಾತ ಸಮುದಾಯದ ಸ್ಥಾನಮಾನ ನೀಡಲಾಗಿದೆ. ಕೇಂದ್ರದಲ್ಲಿ ಮುಸ್ಲಿಂ, ಕ್ರೈಸ್ತ, ಪಾರ್ಸಿ, ಬೌದ್ಧ ಮತ್ತು ಸಿಖ್ ಸಮಾಜಗಳಿಗೆ ಮಾತ್ರ ಅಲ್ಪಸಂಖ್ಯಾತ ಸಮುದಾಯದ ಮಾನ್ಯತೆ ದೊರೆತಿದೆ. ಸಂಪುಟದ ತೀರ್ಮಾನದ ಬಳಿಕ ಜೈನ ಸಮಾಜವೂ ಈ ಪಟ್ಟಿಗೆ ಸೇರಲಿದೆ ಎಂದು ರೆಹಮಾನ್ಖಾನ್ ಸ್ಪಷ್ಟಪಡಿಸಿದರು.
ಜೈನ ಸಮಾಜಕ್ಕೆ ಅಲ್ಪಸಂಖ್ಯಾತ ಸಮುದಾಯದ ಮಾನ್ಯತೆ ಕೊಡಬೇಕು ಎನ್ನುವುದು ಬಹು ದಿನಗಳ ಬೇಡಿಕೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಅನೇಕ ಗಣ್ಯರು ಬೇಡಿಕೆಗೆ ದನಿಗೂಡಿಸಿದ್ದಾರೆ ಎಂದರು.