ರಾಯಚೂರು: ದಾವಣಗೆರೆಯಲ್ಲಿ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಬುಧವಾರ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಟಿಪ್ಪುಸುಲ್ತಾನ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳ ಕೃತ್ಯದಿಂದ ಟಿಪ್ಪುಸುಲ್ತಾನ್ ಅವರ ಅಭಿಮಾನಿಗಳಿಗೆ ನೋವಾಗಿದೆ. ಇತಿಹಾಸ ಪುರುಷ ಹಾಗೂ ಹೋರಾಟಗಾರರಿಗೆ ಅವಮಾನ ಮಾಡಿರುವುದು ಖಂಡನೀಯ ಎಂದು ತಿಳಿಸಿದರು.
ಇಂಥ ಘಟನೆಗಳಿಂದ ಸಮಾಜದ ಶಾಂತಿ ಸೌಹಾರ್ದತೆಯನ್ನು ಕದಡುವ ಯತ್ನ ನಡೆದಿದೆ. ಸರ್ಕಾರ ಇಂಥ ಕೃತ್ಯ ತಡೆಗಟ್ಟಲು ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದರು. ಸಮಾಜದಲ್ಲಿ ಅಶಾಂತಿ ಮೂಡಿಸುವ ಇಂಥ ಘಟನೆಗಳಿಗೆ ಕಾರಣರಾದ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸಬೇಕು ಎಂದು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸಯೀದುದ್ದೀನ್, ಜಿಲ್ಲಾಧ್ಯಕ್ಷ ಖಲೀಲ್ ಅಹಮ್ಮದ್ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ರಾಘವೇಂದ್ರ ಉಟ್ಕೂರು, ಬಸವನಗೌಡ, ವೆಂಕಟೇಶ, ಶ್ರೀಕಾಂತ, ದಿನೇಶ, ಮಹಮ್ಮದ್ ಜಾಫರ್, ಕಾರ್ತಿಕ್, ಅಶೋಕ, ರವಿ ನೆಲಹಾಳ, ಸುದರ್ಶನ, ರವೀಂದ್ರ, ಆಂಜನೇಯ, ಖಾಜಾವಲಿ, ಅಂಬರೀಶ, ಇಲಿಯಾಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.