ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಂಟಲ್ಲಿ ಅರ್ಧಾಯುಷ್ಯ ಕಳೆದ ಹೆಮ್ಮೆಯ ಯಜಮಾನ

ದಧಿಗಿಣತೋ
Last Updated 22 ಜುಲೈ 2016, 8:19 IST
ಅಕ್ಷರ ಗಾತ್ರ

ಕಸ್ತೂರಿ ವರದರಾಯ ಪೈಗಳು ಸುರತ್ಕಲ್ ಮೇಳದ ಯಜಮಾನ. ಇವರ ಮೇಳದ ಗಾಥೆಗೆ ಹತ್ತಿರ ಹತ್ತಿರ ಅರ್ಧ ಶತಮಾನದ ಇತಿಹಾಸವಿದೆ. ಅಭಿಮಾನಿಗಳನ್ನು ಅರ್ಹತೆಯ ಬಲದಿಂದ ಹೊಂದಿದ್ದ ಅವರು ಯಜಮಾನಿಕೆಗೂ ‘ಅರ್ಹತೆಯಿದೆ’ ಮತ್ತು ‘ಅರ್ಹತೆ ಬೇಕು’ ಎಂದು ಅನುಷ್ಠಾನಿಸಿ ತೋರಿಸಿ ಕೊಟ್ಟವರು.

ಪೌರಾಣಿಕ ಪ್ರಸಂಗ-ಪಾತ್ರಗಳ ಆವರಣ ಮತ್ತು ಬದುಕಿನ ಆಸಕ್ತಿಗಳನ್ನು ಮಿಳಿತಗೊಳಿಸಿದವರು. ರಂಗ ಒಪ್ಪುವ ಪ್ರದರ್ಶನಗಳನ್ನು ಸ್ಮರಣೀಯವಾಗಿ ಸಂಪ ನ್ನಗೊಳಿಸಿದರು. ತೊಂಬತ್ತೊಂದು ವರ್ಷಗಳ ತುಂಬು ಜೀವನವನ್ನು ಅನುಭವಿಸಿದ ವರದರಾಯ ಪೈಗಳು 2016 ಜುಲೈ 17ರಂದು ದೈವಾಧೀನರಾದರು. ಅವರು ತಮ್ಮ ಅರ್ಧಾಯುಷ್ಯವನ್ನು ಚೌಕಿಯಲ್ಲೇ ಕಳೆದಿದ್ದರು!


‘ಶ್ರೀ ಮಹಮ್ಮಾಯಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಸುರತ್ಕಲ್’ ಯಕ್ಷಗಾನಕ್ಕೆ ವಾಙ್ಮಯ ವೈಭವ ವನ್ನು ತಂದು ಕೊಟ್ಟ ಮೇಳ. ಸೊಂಟತ್ರಾಣದ ಬದಲಿಗೆ ಪಾತ್ರತ್ರಾಣ, ಭಾವ-ಭಾವನೆಗಳಿಗೆ ಮಾನ, ಬುದ್ಧಿಗೆ ಗ್ರಾಸ, ಶಿಸ್ತಿನ ಬಣ್ಣದ ಮನೆ, ಶಿಸ್ತಿನ ಪ್ರೇಕ್ಷಕರು, ಪೌರಾಣಿಕ ಜಾಡಿನಲ್ಲಿ ಕಾಲ್ಪನಿಕ ಪ್ರಸಂಗ... ಹೀಗೆ ಮೇಳದ ಒಂದೊಂದು ವಿಭಾಗವನ್ನು ಪೋಸ್ಟ್‌ ಮಾರ್ಟಂ ಮಾಡಿದರೆ ಅಪ್ಪಟ ಯಕ್ಷಗಾನದ ಜೀವಂ ತಿಕೆ ಮಿಣುಕುತ್ತದೆ. ‘ಸುರತ್ಕಲ್ ಮೇಳವು ನಮ್ಮದು’ ಎನ್ನುವ ಸಾವಿರಾರು ಮನಸ್ಸುಗಳನ್ನು ಗೆಲ್ಲುವುದು ಸಣ್ಣ ಕೆಲಸವಲ್ಲ. ಅದು ವರದರಾಯ ಪೈಗಳ ಜಾಣ್ಮೆಯ ನಿರ್ವಹಣೆ.

ಮೇಳ ಕಟ್ಟುವುದು ಅವರ ಯೌವನದ ಕನಸು. 1955ರ ಹಿಂದೆ ಮುಂದೆ ಅಚಾನಕ್ಕಾಗಿ ಅದೃಷ್ಟಕ್ಕೆ ಒಲಿದ ಐದು ಸಾವಿರ ರೂಪಾಯಿ ಮೂಲ ಬಂಡವಾಳ ಇರಿಸಿಕೊಂಡು ಅಣ್ಣ ಕಸ್ತೂರಿ ವಾಸುದೇವ ಪೈ ಅವರೊಂದಿಗೆ ಹೊಸ ಮೇಳದ ರೂಪೀಕರಣ. ಸಾಮಾಜಿಕ ಸ್ಥಿತಿ-ಗತಿ, ವೈಯಕ್ತಿಕ ಬದುಕು, ಕಲಾವಿ ದರ ಜೋಡಣೆ, ಮೇಳ ನಿರ್ವಹಣೆ ಹೀಗೆ ಸವಾಲು ಗಳನ್ನು ಎದುರಿಸಿದ ಪೈ ಸಹೋದರರ ಮೇಳವು ಒಂದೊಂದೇ ಹೆಜ್ಜೆಯೂರುತ್ತಾ ತ್ರಿವಿಕ್ರಮನಾಗಿ ಬೆಳೆದು ನಿಂತಿತು. ಅನುಭವವು ‘ಮಾಗಲು ಮತ್ತು ಬಾಗಲು’ ಕಲಿಸಿತ್ತು! ಹಾಗಾಗಿ ಈ ಮೇಳ ದೀರ್ಘ ಕಾಲ ಬಾಳಿತು. ಕಲಾವಿದರಿಗೆ ಬಾಳ್ವೆ ನೀಡಿತು.

ನಾಟ್ಯರಾಣಿ ಶಾಂತಲೆ, ಪಾಪಣ್ಣ ವಿಜಯ, ಕಡು ಗಲಿ ಕುಮಾರ ರಾಮ, ರಾಜ ಯಯಾತಿ, ಸತಿ ಶೀಲ ವತಿ, ತುಳುನಾಡ ಬಲಿಯೇಂದ್ರ, ರಾಣಿ ರತ್ನಾ ವಳಿ.. ಪ್ರಸಂಗಗಳ ಮಾಲೆಗಳು ಮೇಳದ ವಿಜಯ ಮಾಲೆಗಳಾದುವು. ಜನರ ಮನಸ್ಸನ್ನು ಓದುವ ಸಾಮ ರ್ಥ್ಯದ ವರದರಾಯ ಪೈಗಳು ಹೊಸ ಪ್ರಸಂಗಗಳ ಹುಡುಕಾಟ ಮಾಡಿದರು. ಯಕ್ಷಗಾನದ ಸ್ವರೂಪಕ್ಕೆ ತೊಂದರೆಯಾಗದಂತೆ ಪರಿಷ್ಕರಿಸಿದರು. ಕಾಲ್ಪನಿಕ ಪ್ರಸಂಗಗಳ ಪ್ರಸ್ತುತಿಗಳು ಕಾಲಧರ್ಮದ ಪಲ್ಲಟ. ಶನೀಶ್ವರ ಮಹಾತ್ಮೆ, ಬಪ್ಪನಾಡು ಕ್ಷೇತ್ರ ಮಹಾ ತ್ಮೆಯಂತಹ ಪ್ರಸಂಗಗಳನ್ನು ರಂಗ ಒಪ್ಪಿತು. ಪ್ರೇಕ್ಷಕರು ಸ್ವೀಕರಿಸಿದರು.

ಅಗರಿ ಶ್ರೀನಿವಾಸ ಭಾಗವತ, ಅಗರಿ ರಘುರಾಮ ಭಾಗವತ, ಶೇಣಿ ಗೋಪಾಲಕೃಷ್ಣ ಭಟ್, ತೆಕ್ಕಟ್ಟೆ ಆನಂದ ಮಾಸ್ತರ್, ಮಧೂರು ಗಣಪತಿ ರಾವ್, ರಾಮದಾಸ ಸಾಮಗ.. ಹೀಗೆ ಹಿರಿಯರಿದ್ದ ಮೇಳವು ‘ಸುಸಂಸ್ಕೃತ’ ಪದವ್ಯಾಪ್ತಿಯೊಳಗಿತ್ತು. ಗಾನಗಂಧರ್ವ ಪದ್ಯಾಣ ಗಣಪತಿ ಭಟ್ಟರನ್ನು ‘ಭಾಗವತ’ರನ್ನಾಗಿ ರೂಪಿಸಿದ ಮೇಳವಿದು. ಒಬ್ಬೊಬ್ಬ ಕಲಾವಿದನ ಕೊಡುಗೆಯು ಪ್ರಸಂಗ ಉತ್ತುಂಗಕ್ಕೇರಿಸಿತ್ತು. ಇದರಿಂ ದಾಗಿ ಕಲಾವಿದರಿಗೆ, ಮೇಳಕ್ಕೆ, ಪ್ರಸಂಗಕ್ಕೆ ತಾರಾ ಮೌಲ್ಯ ಬಂತು. ಜತೆಗೆ ಕಲೆಕ್ಷನ್ ತುಂಬಿ ಬಂತು.

ಪೈಗಳು ಬಹುಶಃ ವೇಷ ಮಾಡಲಿಲ್ಲ. ಅರ್ಥ ಹೇಳಲಿಲ್ಲ. ಆದರೆ, ಯಾವುದೇ ಪಾತ್ರದ ಆಳೆತ್ತರ, ಅದರ ರಂಗವ್ಯಾಪ್ತಿ, ಪ್ರಸ್ತುತಿಯಲ್ಲಿ ಕಲಾವಿದನ ಜವಾಬ್ದಾರಿಗಳ ಸ್ಪಷ್ಟ ಅರಿವಿತ್ತು, ನಿಲುವಿತ್ತು. ಯಾವ ಕಲಾವಿದನಲ್ಲಿ ಎಷ್ಟು ಅಭಿವ್ಯಕ್ತಿಯಿದೆ ಎನ್ನುವ ಮಾಪಕ ಮತಿಯಲ್ಲಿತ್ತು. ಅದನ್ನು ಹೊರಗೆಳೆವ ಅವರ ಕೌಶಲ ಅಪೂರ್ವ. ಈ ಮಾಪಕವೇ ಪ್ರದರ್ಶನಗಳ ಯಶಸ್ಸಿನ ಗುಟ್ಟು. ಯಜಮಾನರ ಹಾದಿಯನ್ನು ಅರ್ಥ ಮಾಡಿ ಕೊಂಡ ಕಲಾವಿದ ಗಡಣ. ಹಾಗಾಗಿ ನೋಡಿ. ಸುರ ತ್ಕಲ್ ಮೇಳವು ನಿಲುಗಡೆಯಾಗಿ ಹದಿನಾರು ವರ್ಷ ಕಳೆದರೂ ಅದರ ಪ್ರದರ್ಶನಗಳು ಕಾಡುತ್ತವೆ.

ಸಾಮಾನ್ಯವಾಗಿ ಚೌಕಿಗೂ ಯಜಮಾನನಿಗೂ ತುಂಬಾ ಅಂತರ. ಪೈಗಳ ಮೇಳದ ಚೌಕಿ ಮನೆ ಯಿದ್ದಂತೆ! ಕುಟುಂಬ ಸಹಿತವಾಗಿ ಚೌಕಿಯಲ್ಲಿ ಧಾರಾ ಳವಾಗಿ ಕುಳಿತುಕೊಳ್ಳಬಹುದು! ಕಲಾವಿದ ರೊಂದಿಗೆ ಮಾತನಾಡಬಹುದು. ಕಲಾವಿದರ ಕುಟುಂಬವು ಚೌಕಿಗೆ ಬಂದರಂತೂ ಎಲ್ಲರಿಗೆ ಖುಷಿ. ಬೆಸೆದುಕೊಳ್ಳುವ ಇಂತಹ ಆಪ್ತತೆಗಳೇ ಮೇಳದ ಗಟ್ಟಿ ಅಡಿಗಟ್ಟು. ಕಲಾವಿದರೊಂದಿಗೆ ಪೈಗಳ ಊಟ, ತಿಂಡಿ, ನಿದ್ದೆ, ಮಾತುಕತೆ, ಸುಖ-ದುಃಖ ವಿನಿಮಯ. ಮೇಳದ ಯಜಮಾನನಾದವನು ಮೇಳದಲ್ಲೇ ಇರ ಬೇಕು, ಕಲಾವಿದರೊಂದಿಗೆ ಬೆರೆಯಬೇಕು, ಎಂದು ಶೇಣಿಯವರೂ ಹೇಳುತ್ತಿದ್ದರು. ಪೈಗಳಿಗೂ ಶೇಣಿ ಯವರಿಗೂ ಕಳಚದ ನಂಟು. ಶೇಣಿಯವರಿಗೂ ಯಜ ಮಾನರ ಮೇಲೆ ಗೌರವ. ಮೇಳದ ಕುರಿತು ಬಿಟ್ಟು ಕೊಡದ ಪ್ರೀತಿ. ಇಂಥ ಗುಣಗಳು ಕಲಾವಿದರಿಗೆ ಮೇಲ್ಪಂಕ್ತಿ.

ವರದರಾಯ ಪೈಗಳ ಮೇಳದ ನಿರ್ವಹಣೆ ಜಾಣ್ಮೆಯಿಂದ ಕೂಡಿತ್ತು. ದುಬಾರಿತನದಿಂದ ದೂರ. ಅಡುಗೆಗೆ ಸಾಧ್ಯವಾದಷ್ಟೂ ಸ್ಥಳೀಯ ತರಕಾರಿಗಳ ಅವಲಂಬನೆ. ಮೇಳವು ಊರಿನಿಂದ ಊರಿಗೆ ಹೋಗುವಾಗ ಆ ಊರಿನ ಪಾರಂಪರಿಕ ತರಕಾರಿ ಯಾವುದಿದೆಯೋ ಅದರತ್ತ ಆಸಕ್ತಿ. ಎಲ್ಲೆಲ್ಲಿ ಸಂತೆ ಆಗುತ್ತದೋ ಅ ಜಾಗವೆಲ್ಲಾ ಪೈಗಳಿಗೆ ಪರಿಚಿತ. ಸಂತೆ ಆಗುವಲ್ಲಿ ಸುರತ್ಕಲ್ ಮೇಳದ ಆಟ ಖಚಿತ. ಟೆಂಟ್ ಹೌಸ್‌ಫುಲ್.

ಬದ್ಧತೆ ಮೇಳದಲ್ಲಿ ಸಮಯಕ್ಕೆ ಮಹತ್ವ. ಕಲಾ ವಿದರೆಲ್ಲರೂ ಎಂಟು ಗಂಟೆಯೊಳಗೆ ಚೌಕಿಯಲ್ಲಿರುವ ಅಲಿಖಿತ ಶಾಸನ. ಎಂಟೂವರೆಗೆ ಚೌಕಿ ಪೂಜೆ, ಒಂಬತ್ತು ಗಂಟೆಯಿಂದ ಕಟ್ಟುವೇಷ, ನಿತ್ಯ ವೇಷಗಳ ಕುಣಿತ. ಹತ್ತು ಗಂಟೆ ಹತ್ತು ನಿಮಿಷಕ್ಕೆ ಪ್ರಸಂಗ ಶುರು. ಚೌಕಿಯಲ್ಲಿ ದೇವರಿಗೆ ಹೂ, ಹಣ್ಣು ಖಾಯಂ. ಸ್ವತಃ ಪೈಗಳೇ ದೇವರಿಗೆ ಅಲಂಕಾರ ಮಾಡುತ್ತಿದ್ದರು. ಪೂಜೆಯ ಬಳಿಕ ಮೇಳದ ಟಿಕೆಟ್ ಕೌಂಟರ್ ತೆರೆದುಕೊಳ್ಳುತ್ತಿತ್ತು. ಸ್ವತಃ ಪೈಗಳೇ ಕೌಂಟರಿನಲ್ಲಿರು ತ್ತಿದ್ದರು.

ಕಲೆಕ್ಷನ್ ಆದ ಬಳಿಕ ಕೌಂಟರಿಗೆ ಬಾಗಿಲು ಹಾಕಿ ಚೌಕಿಗೆ ಬಂದು ಕಲಾವಿ ದರೊಂದಿಗೆ ಮಾತನಾಡಿದ ಬಳಿಕವೇ ನಿದ್ದೆ. ಬೆಳಿಗ್ಗೆ ಐದು ಗಂಟೆಗೆ ಸ್ನಾನ. ಚೌಕಿ ಪೂಜೆಗೆ ಅಣಿ. ಈ ನಿಯತ್ತು ಬಹಳ ವರ್ಷ ಅನುಷ್ಠಾನ ಮಾಡಿದ್ದರು ಎಂದು ಭಾಗವತ ಪದ್ಯಾಣ ಗಣಪತಿ ಭಟ್ಟರು ಪೈಗಳ ಕಾಯಕ ಸ್ಮರಿಸಿಕೊಳ್ಳುತ್ತಾರೆ. ವರದರಾಯ ಪೈಗಳು 2000ರಲ್ಲಿ ಮೇಳ ನಿಲ್ಲಿಸುವ ಹೊತ್ತಲ್ಲಿ, ಮೇಳ ವೇನೋ ನಿಲ್ಲಿಸಬಹುದು ಆದರೆ, ಕಲಾವಿದರ ಗತಿ ಏನು ಎಂದು ಮರುಗಿದ್ದರು. ಕಲಾ ವಿದರ ಯೋಗ ಕ್ಷೇಮವು ಪೈಗಳ ‘ಯಜ ಮಾನಿಕೆ’ ವ್ಯಾಪ್ತಿಯೊಳಗಿತ್ತು. ಇಂಥ ಯಜಮಾನ ರನ್ನು ಪಡೆದ ಸುರತ್ಕಲ್ ಮೇಳ ಧನ್ಯ.

ಚಿತ್ರ : ಶಾಂತಾರಾಮ ಕುಡ್ವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT