ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಸಮೀಪವೇ ದುಷ್ಕರ್ಮಿಗಳು ಹರಿತ್ರ ಪಾಲಿಟ್ ಎಂಬುವರಿಗೆ ಚಾಕುವಿನಿಂದ ಇರಿದು 200 ಗ್ರಾಂ ಚಿನ್ನಾಭರಣ ಮತ್ತು 1 ಲಕ್ಷ ನಗದು ದರೋಡೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಕೋರಮಂಗಲ ನಾಲ್ಕನೇ ಹಂತದ ನಿವಾಸಿಯಾದ ಹರಿತ್ರ ಅವರು ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.
ಅವರು ರಾತ್ರಿ ಹತ್ತು ಗಂಟೆ ಸುಮಾರಿಗೆ ಕಚೇರಿಯಿಂದ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಮೂವರು ದರೋಡೆಕೋರರು ಬೈಕ್ನಲ್ಲಿ ಹಿಂಬಾಲಿಸಿ ಬಂದು ಕೋರಮಂಗಲ ಪೊಲೀಸ್ ಠಾಣೆ ಸಮೀಪ ಅಡ್ಡಗಟ್ಟಿದ್ದಾರೆ. ನಂತರ ಅವರನ್ನು ಕಾರಿನಿಂದ ಕೆಳಗಿಳಿಸಿ ಹೊಟ್ಟೆಗೆ ಚಾಕುವಿನಿಂದ ಇರಿದು ಹಣ ಚಿನ್ನಾಭರಣ, ಎಟಿಎಂ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
‘ಕೋರಮಂಗಲ ಸುತ್ತಮುತ್ತಲ ಪ್ರದೇಶದಲ್ಲಿ ಸರಗಳವು ಮತ್ತು ದರೋಡೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಮಹಿಳೆಯರು ಹಾಗೂ ವೃದ್ಧರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಟವಾಗಿದೆ’ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಬಂಧನ: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ಶರ್ಟ್ ಮತ್ತು ಪ್ಯಾಂಟ್ಗಳನ್ನು ಮಾರುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಇಬ್ಬರನ್ನು ಬಂಧಿಸಿ ` 21 ಲಕ್ಷ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಜಯನಗರ ನಾಲ್ಕನೇ ಹಂತದ ರಾಘವೇಂದ್ರ (29) ಮತ್ತು ಚಂದ್ರಮೋಹನ್ (28) ಬಂಧಿತರು.
ಆರೋಪಿಗಳು ಎಲೆಕ್ಟ್ರಾನಿಕ್ ಸಿಟಿಯ ರಾಘವೇಂದ್ರ ಲೇಔಟ್ನಲ್ಲಿ ಮತ್ತು ವಿಲ್ಸನ್ಗಾರ್ಡನ್ನಲ್ಲಿ ಎಚ್.ಎಸ್.ಫ್ಯಾಷನ್ಸ್ ಹಾಗೂ ಡಿ.ಜೆ.ಟೆಕ್ಸ್ಟೈಲ್ಸ್ ಹೆಸರಿನ ಅಂಗಡಿ ಇಟ್ಟುಕೊಂಡು ನಕಲಿ ಶರ್ಟ್, ಪ್ಯಾಂಟ್ಗಳನ್ನು ಮಾರಾಟ ಮಾಡಿ ವಂಚಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.