ವಾಷಿಂಗ್ಟನ್ (ಪಿಟಿಐ): ಟ್ರೈವ್ಯಾಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಅಮೆರಿಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ ಆಗ್ರಹಪಡಿಸಿದೆ.
ವೀಸಾ ಅಕ್ರಮದ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾ ಮೂಲದ ಟ್ರೈವ್ಯಾಲಿ ವಿಶ್ವವಿದ್ಯಾಲಯವನ್ನು ಮುಚ್ಚಿದ್ದರಿಂದ ನೂರಾರು ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ ಮುಂದುವರಿಸಲಾಗದೆ ಅತಂತ್ರರಾಗಿದ್ದಾರೆ. ಸೋಮವಾರವಷ್ಟೇ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಜೊತೆ ದೂರವಾಣಿಯಲ್ಲಿ ಈ ಕುರಿತು ಸಂಭಾಷಣೆ ನಡೆಸಿದ್ದರು. ಅಮೆರಿಕದಲ್ಲಿರುವ ಭಾರತದ ರಾಯಭಾರಿ ಮೀರಾ ಶಂಕರ್ ಅವರು ಮಂಗಳವಾರ ಕ್ಲಿಂಟನ್ ಅವರನ್ನು ಭೇಟಿ ಮಾಡಿ ವಿದ್ಯಾರ್ಥಿಗಳ ವಿವರ ಒದಗಿಸಿ ಮನವರಿಕೆ ಮಾಡಿದ್ದಾರೆ ಎಂದು ಭಾರತೀಯ ರಾಜತಾಂತ್ರಿಕ ಕಚೇರಿ ವಕ್ತಾರ ವೀರೇಂದ್ರ ಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೀರಾ ಶಂಕರ್ ಮತ್ತು ಭಾರತದ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಅವರು ಮಂಗಳವಾರ ಸಂಜೆ ಹಿಲರಿ ಕ್ಲಿಂಟನ್ ಅವರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.