ಮುಳಬಾಗಲು: ತಾಲ್ಲೂಕಿನ ಎಚ್.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಚಹಳ್ಳಿ ಗ್ರಾಮದ ಬಳಿ ಮಂಗಳವಾರ ಟ್ರ್ಯಾಕ್ಟರ್ ಮಗುಚಿ ಇಬ್ಬರು ಮೃತಪಟ್ಟು, 17 ಮಂದಿ ಗಾಯಗೊಂಡಿದ್ದಾರೆ.
ಹೊಟ್ಟೆ ಪಾಡಿಗಾಗಿ 21 ಕೂಲಿ ಕಾರ್ಮಿಕರು ನಾಸಹಳ್ಳಿಯಿಂದ ಗೂಕುಂಟೆ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಸಸ್ಯಗಳನ್ನು ನಾಟಿ ಮಾಡಲು ಟ್ರ್ಯಾಕ್ಟರ್ನಲ್ಲಿ ಹೋಗುತ್ತಿದ್ದಾಗ ಮಧ್ಯದ ಚಕ್ರ ಮುರಿದು ಮಗುಚಿತು. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡ ಆಂಜಪ್ಪ (35) ಹಾಗೂ ಲಕ್ಷ್ಮಕ್ಕ (50) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರು.
ತೀವ್ರವಾಗಿ ಗಾಯಗೊಂಡಿದ್ದ ಗಂಗಲಮ್ಮ, ಚಿನ್ನಪಾಪಮ್ಮ, ವೆಂಕಟರೆಡ್ಡಿ ಹೆಚ್ಚಿನ ಚಿಕಿತ್ಸೆಗೆ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ 15 ಮಂದಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಎದುರು ನೆರೆದಿದ್ದ ಮೃತಪಟ್ಟವರ ಹಾಗೂ ಗಾಯಗೊಂಡವರ ಕುಟುಂಬದ ಸದಸ್ಯರ ರೋದನೆ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ಭೇಟಿ ನೀಡಿದ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸಗೌಡ, ಮೃತ ಕುಟುಂಬಕ್ಕೆ ಅರಣ್ಯ ಇಲಾಖೆಯಲ್ಲಿ ಖಾಯಂ ಉದ್ಯೋಗ ನೀಡಬೇಕು. ಎಲ್ಲ ಕೂಲಿ ಕಾರ್ಮಿಕರಿಗೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಮುಳಬಾಗಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.