ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) 2013ನೇ ಸಾಲಿನ ಸರ್. ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಡಾ.ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಲು ನಿರ್ಧರಿಸಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಫ್ಕೆಸಿಸಿಐ ಅಧ್ಯಕ್ಷ ಆರ್.ಶಿವಕುಮಾರ್, ‘ರಾಜ್ಕುಮಾರ್ ಚಲನಚಿತ್ರ ಮಾತ್ರವಲ್ಲದೇ ಬೇರೆ ಬೇರೆ ಕ್ಷೇತ್ರಗಳಲ್ಲೂ ಪ್ರಭಾವ ಬೀರಿದ್ದಾರೆ. ಹೀಗಾಗಿ ಸಂಸ್ಥೆಯ ಸದಸ್ಯರೆಲ್ಲರ ಒಮ್ಮತ ಅಭಿಪ್ರಾಯದ ಮೇರೆಗೆ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಸೆ.15ರಂದು ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಕುಮಾರ್ ಪತ್ನಿ ಪಾರ್ವತಮ್ಮ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ’ ಎಂದರು.
ರಾಜ್ಯಪಾಲ ಹಂಸರಾಜ ಭಾರದ್ವಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಶ್ರೀನಿವಾಸಪ್ರಸಾದ್, ಡಾ.ಎಚ್.ಸಿ .ಮಹದೇವಪ್ಪ, ಅಂಬರೀಷ್, ಉಮಾಶ್ರೀ ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುಐಡಿಎಐ ಅಧ್ಯಕ್ಷ ನಂದನ್ ನೀಲೇಕಣಿ, ಹಿರಿಯ ಲೇಖಕ ದೊಡ್ಡರಂಗೇಗೌಡ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಗಣಿಗಾರಿಕೆ ಸ್ಥಗಿತದಿಂದಾಗಿ 20 ಸಾವಿರ ಕೋಟಿಯಷ್ಟು ರಫ್ತು ಕಡಿಮೆಯಾಗಿದೆ. ಗಣಿ ರಫ್ತನ್ನು ಹೆಚ್ಚಿಸುವ ಸಲುವಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನ ಮಾರ್ಗಸೂಚಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು, ಜತೆಗೆ ರಾಜ್ಯಕ್ಕೆ ಸೂಕ್ತ ಗಣಿ ನೀತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.