ಬೆಂಗಳೂರು: ಭಾರತೀಯ ಹೃದಯ ರೋಗದ ತಜ್ಞರ ಸಂಸ್ಥೆ (ಕಾರ್ಡಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾ) ಇದೇ ೫ರಿಂದ ೮ರ ವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ‘ಹೃದಯ ಸಂಬಂಧಿ ರೋಗಗಳು’ ಈ ಕುರಿತ ೬೫ನೇ ವಾರ್ಷಿಕ ಸಮ್ಮೇಳನವನ್ನು ಆಯೋಜಿಸಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಂಚಾಲಕಿ ಡಾ. ಎಲ್.ಬಿ. ವಿಜಯಲಕ್ಷ್ಮೀ ಬಾಳೇಕುಂದ್ರಿ, ‘ದೇಶದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೃದ್ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಈ ಸಮ್ಮೇಳನವನ್ನು ಏರ್ಪಡಿಸಲಾಗಿದೆ’ ಎಂದರು.
‘ಸಮ್ಮೇಳನದಲ್ಲಿ ಅಮೆರಿಕ, ಇಂಗ್ಲೆಂಡ್, ಈಜಿಪ್ಟ್, ಟರ್ಕಿ ಸೇರಿದಂತೆ ವಿವಿಧ ದೇಶಗಳಿಂದ ಬರುವ ೩೫೦೦ಕ್ಕೂ ಹೆಚ್ಚು ತಜ್ಞರು ಭಾಗವಹಿಸುವ ನಿರೀಕ್ಷೆ ಇದೆ. ಅಲ್ಲದೆ ಹೃದ್ರೋಗ ತಜ್ಞರು ಮತ್ತು ಶಸ್ತ್ರಚಿಕಿತ್ಸಾ ತಜ್ಞರು ಉಪನ್ಯಾಸ ನೀಡಲಿದ್ದು, ಪ್ರಸ್ತುತ ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಚರ್ಚೆಗಳು ನಡೆಯಲಿವೆ’ ಎಂದು ವಿವರಿಸಿದರು. ಹಿರಿಯ ಹೃದ್ರೋಗ ತಜ್ಞ ಡಾ.ಎಂ.ಜೆ.ಗಾಂಧಿ ಅವರು ಡಿ.೫ ರಂದು ಸಂಜೆ ೭ಕ್ಕೆ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.