ದೇವನಹಳ್ಳಿ: ಆಂತರಿಕ ಕಚ್ಚಾಟದಿಂದ ರಾಜ್ಯದ ಬಿಜೆಪಿ ಸರ್ಕಾರದ ವರ್ಚಸ್ಸು ಕುಸಿದಿದ್ದು ನಿರಂತರ ಭ್ರಷ್ಟಾಚಾರಗಳ ಆರೋಪಗಳಲ್ಲಿ ನಲುಗಿ ಹೋಗಿದೆ. ಆದ್ದರಿಂದ ಬರಲಿರುವ ನವೆಂಬರ್ ಅಥವಾ ಡಿಸೆಂಬರ್ನಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಕಂಪೆನಿ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ಭವಿಷ್ಯ ನುಡಿದರು.
ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರದ ಹಿಂಭಾಗದ ಆವರಣದಲ್ಲಿ ಭಾನುವಾರ ದೇವನಹಳ್ಳಿ ವಿಧಾನಸಭಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿಮಾತನಾಡಿದ ಅವರು, ದೇಶದಲ್ಲಿಯೇ ಅತ್ಯಂತ ಭ್ರಷ್ಟ ರಾಜ್ಯ ಎಂಬ ಹಣೆಪಟ್ಟಿ ಕರ್ನಾಟಕ ರಾಜ್ಯಕ್ಕಿದೆ. ಇಂತಹ ಸರ್ಕಾರ ಅಧಿಕಾರಕ್ಕೆ ಬರಲು ಮೂಲ ಕಾರಣ ಎಚ್.ಡಿ.ಕುಮಾರಸ್ವಾಮಿ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ನಾಯಕತ್ವವಿದೆ. ಕಾರ್ಯಕರ್ತರು ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಚುನಾವಣೆಗೆ ಪೂರ್ವಸಿದ್ಧತೆ ಎಂಬಂತೆ ಜೂನ್ 15 ರೊಳಗೆ ಬ್ಲಾಕ್ ಮಟ್ಟದ ಸಮಾವೇಶ ಮುಗಿಸಬೇಕಾಗಿದೆ ಎಂದು ಹೇಳಿದರು.
ಬಯಲು ಸೀಮೆಯ ಶಾಶ್ವತ ಕುಡಿಯುವ ನೀರಿನ ಯೋಜನೆಯಾದ ಎತ್ತಿನ ಹೊಳೆಯಿಂದ ನೀರು ಹರಿಸುವುದಕ್ಕೆ ಜುಲೈ ಒಂದರಿಂದ ಕಾಮಗಾರಿ ಆರಂಭಿಸಿ 28 ತಿಂಗಳಲ್ಲಿ ಮುಕ್ತಾಯಗೊಳಿಸಲಾಗುವುದು ಎಂದರು. ಇದರಿಂದ ಗ್ರಾಮಾಂತರ ಜಿಲ್ಲೆಯ 545 ಕೆರೆಗಳು ಸೇರಿದಂತೆ ಒಟ್ಟು 3184 ಕೆರೆಗಳಿಗೆ ನೀರು ಹರಿಸಲು ಸಾಧ್ಯವಿದೆ ಎಂದರು.
ಶಾಸಕ ಕೆ.ವೆಂಕಟಸ್ವಾಮಿ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಚ್ಚೇಗೌಡ, ಜಿ.ಪಂ ಸದಸ್ಯ ಬಿ.ರಾಜಣ್ಣ, ಮಾಜಿ ಶಾಸಕ ಮುನಿ ನರಸಿಂಹಯ್ಯ ಮಾತನಾಡಿದರು.
ತಾ.ಪಂ ಮಾಜಿ ಅಧ್ಯಕ್ಷ ಚಂದ್ರಯ್ಯ, ಜಿಲ್ಲಾ ಎಸ್.ಸಿ.ಘಟಕದ ಅಧ್ಯಕ್ಷ ಎ.ಚಿನ್ನಪ್ಪ, ಎಸ್.ಟಿ.ಘಟಕದ ಅಧ್ಯಕ್ಷ ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ಕಮಲಾಕ್ಷಿ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗನ್ನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀ ನಾರಾಯಣ, ಉಪಾಧ್ಯಕ್ಷ ಎಸ್.ಪಿ.ಮುನಿರಾಜು, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಖಾದಿ ಬೋರ್ಡ್ ಅಧ್ಯಕ್ಷ ಪಟಾಲಪ್ಪ, ಮಾಜಿ ಅಧ್ಯಕ್ಷ ಎಚ್.ಎಂ.ರವಿಕುಮಾರ್, ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಜಯ ಕುಮಾರ್, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಪ್ರಧಾನ ಕಾರ್ಯದರ್ಶಿ ಮಧು, ಜಿ.ಪಂ ಸದಸ್ಯೆ ಸವಿತಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಪೂರ್ಣಚಂದ್ರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನರಸಿಂಹನಾಯಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.