ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ ಅರಿಯಲು ಇಂಗ್ಲಿಷ್ ಕಲಿಕೆ ಅಗತ್ಯ

Last Updated 10 ಜುಲೈ 2012, 4:30 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯಾರ್ಥಿಗಳಿಗೆ ಉಡುಗೊರೆ ನೀಡುವುದು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಿದರೆ ಅವರ ಶಿಕ್ಷಣಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ವಿಜಯಪುರ ಕೆನರಾ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಜೆ. ಮರಿಸ್ವಾಮಿ ಹೇಳಿದರು.

ಇಲ್ಲಿನ ರಾಜೀವ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವಿದ್ಯಾರ್ಥಿಗಳಿಗೆ ಶನಿವಾರ ಸ್ಥಳೀಯ ಕೆನರಾ ಬ್ಯಾಂಕ್ ಶಾಖೆಯು ಹಮ್ಮಿಕೊಂಡಿದ್ದ ಉಚಿತ ಶಾಲಾ ಬ್ಯಾಗ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಆಧುನಿಕ ತಂತ್ರಜ್ಞಾನದ ಪರಿಚಯಕ್ಕಾಗಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆ ಅನಿವಾರ್ಯ. ಕಲಿಯುವ ಹಂತದಲ್ಲಿ ಮಕ್ಕಳು ಬಡವ, ಅವಕಾಶ ವಂಚಿತ ಎಂಬ ಕೀಳರಿಮೆ ಬಿಟ್ಟು ವ್ಯಾಸಂಗಕ್ಕೆ ಗಮನ ನೀಡಬೇಕು.

ಪೋಷಕರು ಸಹ ವಾರಕ್ಕೊಮ್ಮೆ ಶಾಲೆಗೆ ಭೇಟಿ ನೀಡಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಶಾಲಾ ಶಿಕ್ಷಕರಿಂದ ಮಾಹಿತಿ ಪಡೆಯಬೇಕು. ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಬ್ಯಾಂಕ್‌ನ  ವ್ಯವಹಾರ- ವಹಿವಾಟುಗಳ ಜೊತೆ ಈ ರೀತಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ತೃಪ್ತಿ ನೀಡುತ್ತದೆ ಎಂದರು.

ಕಾಂಗ್ರೆಸ್ ಮುಖಂಡ ಹನೀಫುಲ್ಲಾ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಉಚಿತ ಪುಸ್ತಕ, ಸಮವಸ್ತ್ರ, ಬಿಸಿಯೂಟ, ಸೈಕಲ್ ಮುಂತಾದ  ಸವಲತ್ತುಗಳು ಸರ್ಕಾರ ನೀಡುತ್ತಿದ್ದು , ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಓದಿನಲ್ಲಿ ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ಸಾಧಿಸಿ ತೋರಿಸಬೇಕು ಎಂದರು.

ಸಿಆರ್‌ಪಿ ಚಂದಶೇಖರ್ ಹಡಪದ್ ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೌಲಭ್ಯಗಳ ಸದುಪಯೋಗದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಮನೆಯಲ್ಲಿಯೂ ಓದುವ ವಾತಾವರಣವನ್ನು ಪೋಷಕರು ನಿರ್ಮಿಸಿಕೊಡಬೇಕು ಎಂದರು.

ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸಲಾಯಿತು. ವಿಜಯಪುರ ಕೆನರಾ ಬ್ಯಾಂಕ್ ಶಾಖೆ ವ್ಯವಸ್ಥಾಪಕಿ ಮುನಿರತ್ನಮ್ಮ, ಅಧಿಕಾರಿ ಮಂಜುನಾಥ್, ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್, ಪುರಸಭಾ ಸದಸ್ಯರಾದ ಜಗನ್ನಾಥ್, ನಟರಾಜ್, ಮುಖಂಡ ರಾಜಣ್ಣ, ಬಾಲಕರ ಸರ್ಕಾರಿ ವಸತಿ ನಿಲಯದ ಪಾಲಕರಾದ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

ಶಿಕ್ಷಕಿ ರಾಜೇಶ್ವರಿ ಪ್ರಾರ್ಥಿಸಿದರು. ಪಾರ್ವತಮ್ಮ ನಿರೂಪಿಸಿ, ಸ್ವಾಗತಿಸಿದರು. ಜ್ಯೋತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT