ಧಾರವಾಡ: ನಗರದ ಸೂಪರ್ ಮಾರುಕಟ್ಟೆಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತದೆ. ಜೊತೆಗೆ ಮುಂದಿನ ಮೂರು ತಿಂಗಳಲ್ಲಿ ಹೊಸ ಮಾರುಕಟ್ಟೆ ಪ್ರಸ್ತಾವನೆಗೆ ಸರಕಾರದ ಒಪ್ಪಿಗೆ ಪಡೆದು ಟೆಂಡರ್ ಕರೆಯಲಾಗುತ್ತದೆ ಎನ್ನುವ ಭರವಸೆ ನೀಡಿದ್ದರಿಂದ, ಜೆಡಿಎಸ್ ಶಹರ ಕಾರ್ಯಾಧ್ಯಕ್ಷ ಇಸ್ಮಾಯಿಲ್ ತಮಟಗಾರ ಸೋಮವಾರ ಮಧ್ಯಾಹ್ನ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು.
ಇದೇ 6ರಂದು ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಆಗ ಜಿಲ್ಲಾಧಿಕಾರಿ ದರ್ಪಣ್ ಜೈನ್ ಸ್ಥಳಕ್ಕೆ ಭೇಟಿ ನೀಡಿ, ಸೋಮವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಆದರೂ ತಮಾಟಗಾರ, ಸಭೆ ಫಲಿತಾಂಶ ತಿಳಿದುಕೊಂಡ ನಂತರವೇ ಸತ್ಯಾಗ್ರಹ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿುಲ್ಲಿ ಸಭೆ ನಡೆದ ನಂತರ ಆಡಳಿತ- ಪ್ರತಿಪಕ್ಷದ ಮುಖಂಡರು, ಅಧಿಕಾರಿಗಳು ಸತ್ಯಾಗ್ರಹ ಸ್ಥಳಕ್ಕೆ ತೆರಳಿ ಫಲಿತಾಂಶ ತಿಳಿಸಿದರು. ಶಾಸಕ ಚಂದ್ರಕಾಂತ ಬೆಲ್ಲದ ನೀಡಿದ ಎಳನೀರು ಕುಡಿಯುವ ಮೂಲಕ ಅವರು ಉಪವಾಸ ನಿಲ್ಲಿಸಿದರು.
ಮೇಯರ್ ಪೂರ್ಣಾ ಪಾಟೀಲ, ಉಪಮೇಯರ್ ನಾರಾಯಣ ಜರತಾರಘರ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಪಾಲಿಕೆಯ ಪ್ರತಿಪಕ್ಷದ ನಾಯಕ ದೀಪಕ ಚಿಂಚೋರೆ, ಸದಸ್ಯರು, ಜಿಲ್ಲಾಧಿಕಾರಿ ದರ್ಪಣ ಜೈನ್ ಹಾಗೂ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.