ಚಂಡೀಗಡ (ಪಿಟಿಐ): ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ವಿರುದ್ಧದ ಭೂ ವ್ಯವಹಾರಗಳ ತನಿಖೆಗೆ ಆದೇಶಿಸಿ ವರ್ಗಾವಣೆಗೊಂಡಿದ್ದ ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರು ತಮ್ಮ ಆದೇಶದಿಂದ ಯಾರಿಗಾದರೂ ತೊಂದರೆ ಆಗಿದ್ದಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಬಹುದು ಎಂದು ಗುರುವಾರ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಅವರು ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ಕೆ. ಚೌಧರಿ ಅವರನ್ನು ಭೇಟಿ ಮಾಡಿ ಸುಮಾರು 50 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಆದರೆ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು. ಮಾತುಕತೆ ತೃಪ್ತಿದಾಯಕವಾಗಿತ್ತು ಎಂದಷ್ಟೆ ಅವರು ಪ್ರತಿಕ್ರಿಯಿಸಿದರು.
ಇದೇ ವೇಳೆ ಹರಿಯಾಣದ ನಗರ ಯೋಜನೆಗಳ ಇಲಾಖೆಯ ಮುಖ್ಯಸ್ಥ ಟಿ.ಸಿ. ಗುಪ್ತಾ ಅವರು ಖೇಮ್ಕಾ ಅವರು ತೆಗೆದುಕೊಂಡಿದ್ದ ನಿರ್ಧಾರ ತಪ್ಪು ಹಾಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಖೇಮ್ಕಾ ಪತ್ರದ ಬಗೆಗೆ ತಮಗೇನೂ ಗೊತ್ತಿಲ್ಲ ಎಂದು ಹೇಳುತ್ತಾ ತಮ್ಮ ನಿರ್ಧಾರದಿಂದ ಯಾರಿಗಾದರೂ ತೊಂದರೆಯಾಗಿದ್ದಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿದರು.