ಬೆಂಗಳೂರು: ಕೆಐಎಡಿಬಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಸಿರುವ ಆರೋಪದ ಮೇಲೆ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ನಿವಾಸದ ಮೇಲೆ ಶನಿವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯ ಬೆಂಗಳೂರು ಗ್ರಾಮಾಂತರ ವಿಶೇಷ ನ್ಯಾಯಾಲಯದ ಆದೇಶದಂತೆ ತಮ್ಮಣ್ಣ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಜಯನಗರ ಎರಡನೇ ಹಂತದಲ್ಲಿರುವ ತಮ್ಮಣ್ಣ ಅವರ ನಿವಾಸ ‘ರವಿದರ್ಪಣ’ದ ಮೇಲೆ ಶನಿವಾರ ಬೆಳಿಗ್ಗೆಯೇ ದಾಳಿ ನಡೆಸಿದ ತನಿಖಾ ತಂಡ ದಿನವಿಡೀ ದಾಖಲೆಗಳಿಗಾಗಿ ಶೋಧ ನಡೆಸಿತು.
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಕೆ.ಶ್ರೀಕಂಠ ದಾಳಿಯ ನೇತೃತ್ವ ವಹಿಸಿದ್ದರು. ಇನ್ಸ್ಪೆಕ್ಟರ್ಗಳಾದ ಬಾಲರಾಜ್, ವಜೀರ್ ಅಹ್ಮದ್ ಸೇರಿದಂತೆ ಆರಕ್ಕೂ ಹೆಚ್ಚು ಜನರ ತಂಡ ದಾಳಿಯಲ್ಲಿ ಪಾಲ್ಗೊಂಡಿತ್ತು. ತಮ್ಮಣ್ಣ ಕುಟುಂಬದ ಸ್ಥಿರಾಸ್ತಿ, ಹಣಕಾಸು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳಿಗಾಗಿ ಪರಿಶೀಲನೆ ನಡೆಸಲಾಯಿತು.