ಹನುಮಸಾಗರ: ಸಾಂಸ್ಕೃತಿಕ ನೆಲೆಗಟ್ಟಿನ ಮೇಲಿರುವ ಈ ಶಾಲಾ ಮಟ್ಟದ ಕ್ರೀಡೆಗಳಲ್ಲಿ ನಿರ್ಣಾಯಕರ ನಿರ್ಣಯಕ್ಕೆ ಬದ್ಧರಾಗಿರೋಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಗೋನಾಳ ಹೇಳಿದರು.
ಇಲ್ಲಿನ ಬಾಲಕಿಯರ ಪ್ರೌಢ ಶಾಲಾ ಆವರಣದಲ್ಲಿ ಗುರುವಾರ ನಾಲ್ಕು ದಿನಗಳ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾಜೇಂದ್ರ ಪಂತ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗುರಪ್ಪ ಕುರಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲಕಿಯ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಎಂ.ಡಿ.ಮಕಾನದಾರ ಮಾತನಾಡಿದರು. ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾ ಸ್ಫೂರ್ತಿಯೊಂದಿಗೆ ಸ್ಪರ್ಧೆ ಎದುರಿಸಬೇಕು ಎಂದು ಸಲಹೆ ನೀಡಿದರು.
ಗುರಪ್ಪ ಕುರಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕ ಸಂಘದ ಅಧ್ಯಕ್ಷ ಸೋಮಲಿಂಗಪ್ಪ ಗುರಿಕಾರ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ರಾಜಾಭಕ್ಷಿ ಪೆಂಡಾರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ದೈಹಿಕ ಶಿಕ್ಷಣಾಧಿಕಾರಿ ವಿ.ಬಿ. ದಾದ್ಮಿ, ಶಿಕ್ಷಣ ಸಂಯೋಜಕ ಚಂದ್ರಶೇಖರಯ್ಯ, ದೈಹಿಕ ಶಿಕ್ಷಕ ಸಂಘದ ಜಿಲ್ಲಾ ಅಧ್ಯಕ್ಷ ಅಬ್ದುಲ್ ಕರೀಂ ವಂಟೆಳಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಉಪಾಧ್ಯಕ್ಷ ಶಿವಾನಂದ ನಾಗೂರ ಮತ್ತಿತರರು ಇದ್ದರು.