ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 7ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
ಈ ಕುರಿತ ಕಡತಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶುಕ್ರವಾರ ಸಂಜೆ ಸಹಿ ಹಾಕಿದರು.
ಸರ್ಕಾರಿ ನೌಕರರಿಗೆ ಮಧ್ಯಂತರ ವೇತನ ನೀಡುವ ಸಂಬಂಧ ಚರ್ಚಿಸಲು ಗೌಡರು ಅಧಿಕಾರಿಗಳು ಮತ್ತು ನೌಕರರ ಸಂಘದ ಪ್ರತಿನಿಧಿಗಳ ಸಭೆ ಕರೆದಿದ್ದರು. ಇದೇ ಸಂದರ್ಭದಲ್ಲಿ ತುಟ್ಟಿಭತ್ಯೆ ನೀಡುವ ಕಡತಕ್ಕೂ ಸಹಿ ಹಾಕಿದ್ದು, ಶನಿವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್.ಬೈರಪ್ಪ `ಪ್ರಜಾವಾಣಿ~ಗೆ ತಿಳಿಸಿದರು.
ಜುಲೈ 1ರಿಂದ ಪೂರ್ವಾನ್ವಯವಾಗುವ ಹಾಗೆ ಎಲ್ಲ ನೌಕರರ ತುಟ್ಟಿಭತ್ಯೆ ಹೆಚ್ಚಾಗಲಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 700 ಕೋಟಿ ರೂಪಾಯಿ ಹೊರೆಯಾಗಲಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನವಾದ ವೇತನ ನೀಡುವ ಸಂಬಂಧ ಪರಿಶೀಲಿಸಲು ಅಭಿವೃದ್ಧಿ ಆಯುಕ್ತ ಸುಬೀರ್ ಹರಿಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ವೇತನ ಸಮಿತಿ ರಚಿಸಲಾಗಿದೆ. ಈ ಸಂದರ್ಭದಲ್ಲಿ ಈ ಕುರಿತೂ ಚರ್ಚಿಸಲಾಯಿತು. ರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್ ಅಲ್ಲದೆ ಇತರರು ಭಾಗವಹಿಸಿದ್ದರು.
ಶೇ 30ರಷ್ಟು ಮಧ್ಯಂತರ ಪರಿಹಾರ ಕೊಡಬೇಕೆನ್ನುವ ಬೇಡಿಕೆ ಇಟ್ಟಿದ್ದು, ಅದನ್ನು ಈಡೇರಿಸಬೇಕೆನ್ನುವ ಒತ್ತಾಯ ಮಾಡಲಾಗಿದೆ ಎಂದು ಬೈರಪ್ಪ ತಿಳಿಸಿದರು.ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಒಂದೆರಡು ದಿನಗಳಲ್ಲಿ ಮತ್ತೊಮ್ಮೆ ಸಭೆ ಸೇರಿ ಮಧ್ಯಂತರ ಪರಿಹಾರ ಘೋಷಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದರು.