ಶಿವಮೊಗ್ಗ: ತುರ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಸಜ್ಜುಗೊಂಡಿವೆ. ಮುಂಬರುವ ಬೇಸಿಗೆ ದಿನಗಳಲ್ಲಿನ ನೀರಿನ ಬೇಡಿಕೆ ಈಡೇರಿಸಲು ಸಿದ್ಧತೆಗಳನ್ನು ಕೈಗೊಳ್ಳಲು ಮುಂದಾಗಿವೆ.
ಆದರೆ, ವಿದ್ಯುತ್ ಕೊರತೆಯಿಂದ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಎದುರಾಗಿದೆ. ಹಾಗಾಗಿ, ಕೆಲವು ಪಟ್ಟಣಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಸ್ಥಿತಿ ಇದೆ.
ತುರ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಈಗಾಗಲೇ ಜಿಲ್ಲೆಗೆ ಸರ್ಕಾರ ರೂ. 50 ಲಕ್ಷ ಬಿಡುಗಡೆ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 8.33ಲಕ್ಷ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ತಕ್ಕಂತೆ ಕೆಲವು ತಾಲ್ಲೂಕುಗಳಲ್ಲಿ ಕ್ರಿಯಾ ಯೋಜನೆ ಕೂಡ ರೂಪಿಸಲಾಗಿದೆ.
ತುರ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲು ಮಾರ್ಚ್ 2ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆಯಲಾಗಿದೆ.
ಸದ್ಯಕ್ಕೆ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಹಾಹಾಕಾರ ಇಲ್ಲ. ಇದುವರೆಗೂ ಯಾವುದೇ ಒಂದು ಪ್ರಕರಣ ಕಂಡುಬಂದಿಲ್ಲ. ಆದರೆ, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗಬಹುದು. ಇದರ ನಿರ್ವಹಣೆಗೆ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ನೇಮಕ ಮಾಡಲಾಗಿದೆ.
ಸಮಿತಿಯಲ್ಲಿ ಆಯಾ ಕ್ಷೇತ್ರದ ಶಾಸಕರು, ತಹಶೀಲ್ದಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಇರುತ್ತಾರೆ ಎನ್ನುತ್ತಾರೆ ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಕೆ.ಎಲ್. ಸುಬ್ರಮಣ್ಯ.