ಬೆಂಗಳೂರು: ಜನವರಿ ತಿಂಗಳ ಕೊನೆ ಅಥವಾ ಫೆಬ್ರುವರಿ ಮೊದಲ ವಾರ ತೃತೀಯ ರಂಗ ನಾಯಕರ ಸಮಾವೇಶ ನಡೆಯಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
15 – 16 ಪ್ರಾದೇಶಿಕ ಪಕ್ಷಗಳ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಅಧಿಕೃತವಾಗಿ ತೃತೀಯ ರಂಗಕ್ಕೆ ಚಾಲನೆ ದೊರೆಯಲಿದೆ ಎಂದು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಬೇಕೇ ಅಥವಾ ಹೊರ ಭಾಗದಲ್ಲಿ ನಡೆಸಬೇಕೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಸಂಚಾರಕ್ಕೆ ತೊಂದರೆ ಆಗಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸ್ಥಳವನ್ನು ಅಂತಿಮಗೊಳಿಸಲಾಗುವುದು. 7 – 8 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ವಿಜಯ ಕಾಂಗ್ರೆಸ್ ಮತ್ತು ಬಿಜೆಪಿಗೆ ಭವಿಷ್ಯ ಇಲ್ಲ ಎಂಬುದನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷಗಳು ನಿರ್ಣಾಯಕ ಪಾತ್ರ ವಹಿಸಲಿವೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಶ ವಾಗಲಿದೆ ಎಂದರು.
ರಾಜ್ಯ ಸರ್ಕಾರ ದಿವಾಳಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗುತ್ತಿಗೆದಾರರಿಗೆ ಬಿಲ್ ಪಾವತಿಸಲು, ಶಿಕ್ಷಕರಿಗೆ ಸಂಬಳ ನೀಡಲು ಹಣ ಇಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ಟೀಕಿಸಿದರು.