ಸಿರುಗುಪ್ಪ: ತೆಕ್ಕಲಕೋಟೆ ಪಟ್ಟಣವನ್ನು ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.
ತಾಲ್ಲೂಕಿನ ತೆಕ್ಕಲಕೋಟೆಯಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಇಲ್ಲಿಯ ವಸತಿಹೀನರಿಗೆ ನಮ್ಮ ಮನೆ ಯೋಜನೆಯಡಿಯಲ್ಲಿ 500 ಮನೆಗಳನ್ನು ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಪಟ್ಟಣದ ಜನತೆಗೆ ಕುಡಿಯುವ ನೀರಿನ ಪೂರೈಕೆ.
ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು, ಜನರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ಬರ ಕಾಮಗಾರಿ ಯೋಜನೆಯಡಿ ಹೊಕ್ರಾಣಿ ಕೆರೆ ಮತ್ತು ಎಡಿ ಕೆರೆಯ ಹೂಳು ತೆಗೆಸಲು ತಲಾ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಕೂಲಿ ಕೆಲಸ ನೀಡುವಂತೆ ಸಭೆಯಲ್ಲಿ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ರಾರಾವಿ, ಸಿರಿಗೇರಿ, ಸಿರುಗುಪ್ಪಕ್ಕೆ ಹೆಚ್ಚುವರಿಯಾಗಿ ನೆಮ್ಮದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಈ ಸಭೆಯಲ್ಲಿ 48 ಅರ್ಜಿಗಳು ಬಂದಿದ್ದು, ಆಯಾ ಇಲಾಖೆಗಳು ಪರಿಶೀಲಿಸಿ ಅರ್ಜಿದಾರರಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ತಹಸೀಲ್ದಾರ್ ಸಿ.ಎಚ್.ಶಿವಕುಮಾರ್ ತಿಳಿಸಿದರು.
ಜಿ.ಪಂ.ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಮಿತಿ ಅಧ್ಯಕ್ಷ ಡಿ.ಸೋಮಪ್ಪ, ಪ.ಪಂ.ಅಧ್ಯಕ್ಷ ಮಾರೆಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕೆ.ಕೃಷ್ಣ, ವಿಎಸ್ಎಸ್ಎನ್ ಅಧ್ಯಕ್ಷ ಲಕ್ಷ್ಮಣ, ಕೆ.ಪ್ರಭು, ಆಳೂರು ಹನುಮಂತಪ್ಪ, ವೆಂಕಟೇಶ, ಎಂ.ಅಫ್ಜಲ್ಸಾಬ್ ಮತ್ತು ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.