ಕೊರಟಗೆರೆ: ತ್ಯಾಜ್ಯ ವಿಲೇವಾರಿಗೆ ಸಾರ್ವಜನಿಕರ ಸಂಪೂರ್ಣ ಸಹಕಾರ ಅತ್ಯಗತ್ಯ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಮಾರಾಜು ಅಭಿಪ್ರಾಯಪಟ್ಟರು.
ಪಟ್ಟಣ ಪಂಚಾಯಿತಿ ವತಿಯಿಂದ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಬೋಡಬಂಡೇನಹಳ್ಳಿ ರಸ್ತೆಯ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತ್ಯಾಜ್ಯ ವಸ್ತು ನಿರ್ವಹಣೆ ಕುರಿತು ಅರಿವು ಮೂಡಿಸುವ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಸಿ ಮತ್ತು ಒಣ ಕಸವನ್ನು ಮೂಲದಲ್ಲಿಯೇ ಬೇರ್ಪಡಿಸುವ ನಿಟ್ಟಿನಲ್ಲಿ ಪಟ್ಟಣದ ಪ್ರತಿ ಮನೆಗೂ ಹಸಿರು ಹಾಗೂ ಕೆಂಪು ಬಣ್ಣದ ಡಬ್ಬಗಳನ್ನು ನೀಡಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಪ.ಪಂ ವತಿಯಿಂದ ಬಯೋಪ್ಲಾಂಟ್ ಸ್ಥಾಪಿಸುವ ಹಾಗೂ ಕೊಳಚೆ ನೀರು ಶುದ್ಧೀಕರಣ ಘಟಕ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಘನ ತ್ಯಾಜ್ಯ ವಸ್ತು ನಿರ್ವಹಣೆ ಕುರಿತು ಅರಿವು ಮೂಡಿಸುವ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪಂಕಜಾ ನಾಗೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ಪುಟ್ಟನರಸಪ್ಪ, ಸದಸ್ಯರಾದ ನಾಜೀಮಾ ಬೇಗಂ, ಕೆ.ವಿ.ಮಂಜುನಾಥ್, ನಯಾಜ್, ಹನುಮಂತರಾಯಪ್ಪ, ಸತ್ಯನಾರಾಯಣ ಶೆಟ್ಟಿ, ಮುಖ್ಯಾಧಿಕಾರಿ ಶ್ರೀನಿವಾಸ್, ಬಾಲಚಂದ್ರ, ಮಲ್ಲಣ್ಣ ಮತ್ತಿತರರು ಉಪಸ್ಥಿತರಿದ್ದರು.