ಬೆಂಗಳೂರು: ಹೆಸರುಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು ಗುರುತಿಸಿರುವ ಜಾಗದ ಬಗ್ಗೆ ಎರಡು ಇಲಾಖೆಗಳ ನಡುವೆ ಒಮ್ಮತ ಮೂಡದ ಕಾರಣ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ಗೃಹ ಕಚೇರಿ `ಕೃಷ್ಣಾ'ದಲ್ಲಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ, ಥೀಮ್ ಪಾರ್ಕ್ಗೆ ಪ್ರವಾಸೋದ್ಯಮ ಇಲಾಖೆ ಗುರುತಿಸಿರುವ ಜಾಗದ ಬಗ್ಗೆ ಪಶುಸಂಗೋಪನಾ ಇಲಾಖೆ ಆಕ್ಷೇಪ ವ್ಯಕ್ತಪಡಿಸಿತು. ಆಗ ಮಧ್ಯಪ್ರವೇಶಿಸಿದ ಶೆಟ್ಟರ್, `ಎರಡೂ ಇಲಾಖೆಗಳ ಅಧಿಕಾರಿಗಳು ಮತ್ತೊಮ್ಮೆ ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಿ' ಎಂದು ಸೂಚಿಸಿದರು ಎನ್ನಲಾಗಿದೆ.
ಥೀಮ್ ಪಾರ್ಕ್ ಸ್ಥಾಪನೆಗೆ ಗುರುತಿಸಿರುವ ಜಮೀನು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಜಾಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ. ಹೀಗಾಗಿ ಆ ಜಾಗವನ್ನು ನೀಡಲು ಆಗುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ತಿಳಿಸಿದರು ಎಂದು ಗೊತ್ತಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಥೀಮ್ ಪಾರ್ಕ್ ಸ್ಥಾಪನೆಗೆ ಪ್ರವಾಸೋದ್ಯಮ ಇಲಾಖೆಯಿಂದ 320 ಎಕರೆ ಜಾಗ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಆದರೆ, ಪಾರ್ಕ್ ಸ್ಥಾಪನೆಗೆ ಖಚಿತವಾಗಿ ಬೇಕಿರುವ ಭೂಮಿ, ತಗಲುವ ವೆಚ್ಚ, ಯೋಜನೆ ಪೂರ್ಣಗೊಳಿಸಲು ಬೇಕಾಗುವ ಅವಧಿ ಮುಂತಾದ ಯಾವ ವಿವರಗಳನ್ನೂ ನೀಡಿಲ್ಲ. ಈ ಸಂಬಂಧ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸೂಚಿಸಲಾಗಿದೆ ಎಂದರು.