ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಲಿರುವ ನೂತನ ಬಜೆಟ್ನಲ್ಲಿ ಶೇಕಡಾ 23ರಷ್ಟು ಹಣವನ್ನು ದಲಿತ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಉಪಯೋಗವಾಗುವಂತಹ ಯೋಜನೆ ರೂಪಿಸಿ, ನಿಗಾವಹಿಸಲು ಪ್ರತ್ಯೇಕ ಮಂಡಳಿಯನ್ನು ಸರ್ಕಾರ ರಚಿಸಬೇಕು ಎಂದರು.
ವಿಶೇಷ ಘಟಕ ಯೋಜನೆಯ ಹಣ 39 ಇಲಾಖೆಗಳಿಗೆ ಹಂಚಿ ಹೋಗುತ್ತಿದ್ದು, ಸಮುದಾಯದ ಜನರ ಅಭಿವೃದ್ಧಿಗಾಗಿ ಬಳಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಣದ ಸದ್ಬಳಕೆಗಾಗಿ ಏಕಗವಾಕ್ಷಿ ಯೋಜನೆಯನ್ನು ಜಾರಿಗೆ ತರಬೇಕು ಎಂದರು.
ಫಲಾನುಭವಿಗಳ ಆಯ್ಕೆ ಸಮಿತಿಗೆ ಆಯಾ ಕ್ಷೇತ್ರಗಳ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸಬಾರದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ `ಹೈಪವರ್ ಕಮಿಟಿ' 6 ತಿಂಗಳಿಗೊಮ್ಮೆ ಸಭೆ ಕರೆಯಬೇಕು ಹಾಗೂ ಎಲ್ಲಾ ಬ್ಯಾಕ್ಲಾಗ್ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಜೀವನಹಳ್ಳಿ ಆರ್. ವೆಂಕಟೇಶ್ ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನವನ್ನು ಸಹ ಹೆಚ್ಚಿಸಿ, ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಸಾಮಾಜಿಕ ಬಹಿಷ್ಕಾರದ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಪಡೆಯುವ ವರದಿಗಳನ್ನು ಜಿಲ್ಲಾ ಮಟ್ಟದ ಸಭೆಗಳಲ್ಲಿ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಹಕ್ಕುಗಳ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆ ಅನುಷ್ಠಾನವಾಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕು ಎಂದು ಆಗ್ರಹಿಸಿದರು.