ಬೆಂಗಳೂರು: ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಸ್ಥಾನಕ್ಕೆ ಶೋಧನಾ ಸಮಿತಿ ಮೂವರ ಹೆಸರನ್ನು ಶಿಫಾರಸು ಮಾಡಿದೆ.
ಡಾ.ಯು.ಆರ್.ಅನಂತಮೂರ್ತಿ ಅಧ್ಯಕ್ಷತೆಯ ಶೋಧನಾ ಸಮಿತಿ ಮಂಗಳವಾರ 16 ಮಂದಿ ಪ್ರಾಧ್ಯಾಪಕರನ್ನು ಸಂದರ್ಶನಕ್ಕೆ ಒಳಪಡಿಸಿ, ಅಂತಿಮವಾಗಿ ಮೂವರ ಹೆಸರನ್ನು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಇದೇ ಮೊದಲ ಬಾರಿಗೆ ಆಕಾಂಕ್ಷಿಗಳನ್ನು ಸಂದರ್ಶನಕ್ಕೆ ಒಳಪಡಿಸಲಾಗಿತ್ತು. ಆದರೆ, ಯಾವ ಮಾನದಂಡದ ಮೇಲೆ ಸಂದರ್ಶನ ನಡೆಸಲಾಯಿತು ಎಂಬುದು ಗೊತ್ತಾಗಿಲ್ಲ. 60ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ 16 ಮಂದಿಯನ್ನು ಆಯ್ಕೆ ಮಾಡಿ ಸಂದರ್ಶನಕ್ಕೆ ಆಹ್ವಾನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಹಿಂದೆ ಸಿ.ಟಿ.ರವಿ ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಕುಲಪತಿಗಳ ನೇಮಕ ಸಂಬಂಧ ಮಾರ್ಗಸೂಚಿ ರೂಪಿಸುವ ಪ್ರಸ್ತಾವನೆ ಸಿದ್ಧವಾಗಿತ್ತು. ಆದರೆ, ಇದುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ ಎನ್ನಲಾಗಿದೆ.