ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ಫಲಾನುಭವಿ ಬಿಜೆಪಿ ರಾಜ್ಯಸಭಾ ಸದಸ್ಯ ಅಜಯ್ ಸಂಚೇತಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿರುವುದಾಗಿ ತಮ್ಮ ವಿರುದ್ಧ ಆರೋಪ ಮಾಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಸೋಮವಾರ ಇಲ್ಲಿಯ ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಗಡ್ಕರಿ ಮತ್ತು ಸಂಚೇತಿ ವ್ಯಾವಹಾರಿಕ ಪಾಲುದಾರರಾಗಿದ್ದು ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ 500 ಕೋಟಿ ರೂಪಾಯಿ ಲಾಭ ಗಳಿಸಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಇತ್ತೀಚೆಗೆ ಆರೋಪ ಮಾಡಿದ್ದರು.
ತಮ್ಮ ಕಕ್ಷಿದಾರ ಗಡ್ಕರಿ, ಸಂಚೇತಿ ಅವರೊಂದಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ವ್ಯಾವಹಾರಿಕ ಸಂಬಂಧ ಹೊಂದಿಲ್ಲ. ಅವರ ಹೆಸರಿಗೆ ಮಸಿ ಬಳಿಯುವ ದುರುದ್ದೇಶದಿಂದ ಆಧಾರ ರಹಿತ ಆರೋಪ ಮಾಡಲಾಗಿದೆ ಎಂದು ಗಡ್ಕರಿ ಪರ ವಕೀಲರಾದ ಪಿಂಕಿ ಆನಂದ್ ವಾದಿಸಿದರು. ಈ ವೇಳೆ ಹಾಜರಿದ್ದ ಗಡ್ಕರಿ ಅವರ ಹೇಳಿಕೆಯನ್ನೂ ದಾಖಲಿಸಿಕೊಳ್ಳಲು ನ್ಯಾಯಾಧೀಶರು ನಿರ್ಧರಿಸಿದರು.
ಸೆಪ್ಟೆಂಬರ್ 14ರಂದು ದಿಗ್ವಿಜಯ್ ಸಿಂಗ್ ಅವರಿಗೆ ನೋಟಿಸ್ ನೀಡಲಾಗಿದ್ದು ಅವರಿಂದ ಇದುವರೆಗೂ ಯಾವುದೇ ಉತ್ತರ ಬಂದಿಲ್ಲ ಎಂದು ಗಡ್ಕರಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.