ಬೆಂಗಳೂರು: ಮರಳು ಲಾರಿ ಮಾಲೀಕರ ಮುಷ್ಕರದಿಂದ ಕಟ್ಟಡ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಸದಸ್ಯರು ನಗರದ ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಾದೇಶ್, ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮರಳು ಲಾರಿಗಳ ಮಾಲೀಕರು ನಡೆಸುತ್ತಿರುವ ಮುಷ್ಕರ 18ನೇ ದಿನಕ್ಕೆ ಕಾಲಿಟ್ಟಿದೆ. ಇದು ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹಲವೆಡೆ ನಿರ್ಮಾಣ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೂಲಿ ಕಾರ್ಮಿಕರು ದುಡಿಮೆ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಲಾರಿ ಮಾಲೀಕರ ಜತೆ ಚರ್ಚಿಸಿ ಪರಿಹಾರದ ಭರವಸೆ ನೀಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.