ಯಲಹಂಕ: ಬಿಜೆಪಿ ಸರ್ಕಾರ ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದ್ದು, ಪ್ರಜ್ಞಾವಂತ ಜನರು ಮುಂಬರುವ ಚುನಾವಣೆಯಲ್ಲಿ ಸರಿಯಾದ ತೀರ್ಮಾನ ತೆಗೆದುಕೊಳ್ಳದಿದ್ದರೆ ರಾಜ್ಯಕ್ಕೆ ಗಂಡಾಂತರ ತಪ್ಪಿದ್ದಲ್ಲ ಎಂದು ಶಾಸಕ ಕೃಷ್ಣಬೈರೇಗೌಡ ಎಚ್ಚರಿಸಿದರು.
ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ತರಹುಣಿಸೆ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, `ರಾಜ್ಯದಲ್ಲಿ ಮೂರೂವರೆ ವರ್ಷಗಳ ಕಾಲ ದುರಾಡಳಿತ ನಡೆಸಿದ ಬಿಜೆಪಿಗೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ~ ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ದಯಾನಂದರೆಡ್ಡಿ, ಮಾಜಿ ಶಾಸಕ ವಿ.ಕೃಷ್ಣಪ್ಪ ಮಾತನಾಡಿದರು. ಜಿ.ಪಂ. ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಕೆಪಿಸಿಸಿ ಸದಸ್ಯ ಸಿ.ವೆಂಕಟೇಶ್, ಗ್ರಾ.ಪಂ. ಅಧ್ಯಕ್ಷ ಆಂಜಿನಪ್ಪ, ಉಪಾಧ್ಯಕ್ಷೆ ಸುಮಿತ್ರಾ ರಾಜಣ್ಣ, ಮಾಜಿ ಅಧ್ಯಕ್ಷರಾದ ಕೆ. ಶ್ರೀನಿವಾಸಯ್ಯ, ಬಿ.ಕೆ.ಮಂಜುನಾಥಗೌಡ, ನಾರಾಯಣಗೌಡ, ಬೆಂಗಳೂರು ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಟಿ.ಎಂ. ಶ್ರೀರಾಮ್ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.