ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಇದೇ 21ರಿಂದ 26ರವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದೆ. ಈ ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 500 ವಿಶೇಷ ಬಸ್ಸುಗಳು ಸಂಚರಿಸಲಿವೆ.
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ತಿರುಪತಿ ಕಡೆಗೆ ತೆರಳುವ ಬಸ್ಸುಗಳು ನಗರದ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡಲಿವೆ.
ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಸಾಗುವ ಬಸ್ಸುಗಳು ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಹೊರಡಲಿವೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಶಾಂತಿನಗರದಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದಿಂದ ತಮಿಳುನಾಡಿನ ಮದುರೆ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರುಗಳಿಗೆ ವಿಶೇಷ ಬಸ್ಸುಗಳು ಹೊರಡಲಿವೆ.
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ಗುಲ್ಬರ್ಗ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ಗೆ ಸಾಗುವ ಬಸ್ಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ನಗರದ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ತೆರಳಬೇಕು. ಇದೇ ಪ್ರದೇಶಗಳಿಗೆ ತೆರಳುವ ಟಿಕೆಟ್ ಕಾಯ್ದಿರಿಸದ ಪ್ರಯಾಣಿಕರಿಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಬಸ್ನ ವ್ಯವಸ್ಥೆ ಮಾಡಲಾಗಿದೆ.
ಬಸ್ಸುಗಳು ಯಾವ ನಿಲ್ದಾಣದಿಂದ ಹೊರಡುತ್ತವೆ ಎಂಬುದನ್ನು ಟಿಕೆಟ್ ಮೇಲೆ ನಮೂದಿಸಲಾಗಿರುತ್ತದೆ. ನಿಗಮದ ವೆಬ್ಸೈಟ್ (ಡಿಡಿಡಿ.ಠ್ಟಠ್ಚಿ.ಜ್ಞಿ) ಅಥವಾ 56767 ಸಂಖ್ಯೆಗೆ ಎಸ್ಎಂಎಸ್ ಕಳುಹಿಸುವ ಮೂಲಕ ಟಿಕೆಟ್ ಕಾಯ್ದಿರಿಸಬಹುದು ಎಂದು ಪ್ರಕಟಣೆ ತಿಳಿಸಿದೆ.