ಬೆಂಗಳೂರು: ನಗರದ ಮಲ್ಲೇಶ್ವರಂ ವೃತ್ತದ ಬಳಿ ದ್ವಿಚಕ್ರವಾಹನದ ಮೇಲೆ ಹೋಗುತ್ತಿದ್ದ ಗಾಂಧಿನಗರದ (94ನೇ ವಾರ್ಡ್) ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಎಸ್.ನಟರಾಜ್ ಮೇಲೆ ವ್ಯಾನ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.
ನಟರಾಜ್ ಅವರು ಶನಿವಾರ ಮಲ್ಲೇಶ್ವರಂ ವೃತ್ತದ ಬಳಿ ಬರುತ್ತಲೇ ವ್ಯಾನ್ನಲ್ಲಿ ಬಂದ ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟರಾಜ್ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತರಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.