ನವದೆಹಲಿ (ಪಿಟಿಐ): 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಒಂದು ಸ್ಥಾನವನ್ನು ಗೆದ್ದುಕೊಂಡು ಇತರ 32 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಇರುವ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಲವು ವರ್ಷಗಳ ಬಳಿಕ ದೆಹಲಿ ಗದ್ದುಗೆ ಏರುವ ನಿಟ್ಟಿನಲ್ಲಿ ಸಾಗಿದೆ.
ಚುನಾವಣಾ ಕಣದಲ್ಲಿ ಚೊಚ್ಚಲ ಹೆಜ್ಜೆ ಇರಿಸಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು (ಎಎಪಿ) ಭಾರಿ ಅಲೆ ಎಬ್ಬಿಸಿ 3 ಸ್ಥಾನಗಳನ್ನು ಗೆದ್ದುಕೊಂಡು 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಭಾರಿ ದಾಖಲೆ ನಿರ್ಮಿಸಿದೆ.
ಕೇವಲ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ.
ಫಲಿತಾಂಶ ಹೊರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ರಾಜೀನಾಮೆ ಸಲ್ಲಿಸಿ ಸೋಲು ಒಪ್ಪಿಕೊಂಡಿದ್ದಾರೆ.
ರಾಜಕೀಯ ಪಕ್ಷ ನಿರ್ಮಿಸಲು ಹೊರಟಾಗ ಕೇಜ್ರಿವಾಲ್ ಜೊತೆಗೆ ಮುನಿಸಿಕೊಂಡಿದ್ದ ಸಾಮಾಜಿಕ ಧುರೀಣ ಅಣ್ಣಾ ಹಜಾರೆ ಅವರು ಆಮ್ ಆದ್ಮಿ ಪಕ್ಷದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.