ಬೆಂಗಳೂರು: `ಗೃಹ ಸಚಿವ ಆರ್. ಅಶೋಕ ಮತ್ತು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರ ದೆಹಲಿ ಭೇಟಿಗೆ ರಾಜಕೀಯ ಅರ್ಥ ನೀಡುವ ಅವಶ್ಯಕತೆ ಇಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.
ಗೃಹ ಕಚೇರಿ `ಕೃಷ್ಣಾ~ದಲ್ಲಿ ವರದಿಗಾರರ ಜೊತೆ ಶುಕ್ರವಾರ ಮಾತನಾಡಿ, `ಶೋಭಾ ಮತ್ತು ಅಶೋಕ ಅವರು ತಮ್ಮ ಇಲಾಖೆಗಳ ಕೆಲಸದ ನಿಮಿತ್ತ ದೆಹಲಿಗೆ ಭೇಟಿ ನೀಡಿದ್ದರು. ಅದೇ ಸಂದರ್ಭದಲ್ಲಿ ಪಕ್ಷದ ಹಿರಿಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ~ ಎಂದರು.
`ರಾಜ್ಯದ ಮುಖಂಡರು ದೆಹಲಿಗೆ ಹೋದಾಗ ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದು ಸಾಮಾನ್ಯ. ನಾನೂ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ~ ಎಂದರು.