ಪಾಂಡವಪುರ: ಭಕ್ತರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ದೇವಸ್ಥಾನಗಳನ್ನು ಸ್ವಚ್ಛಗೊಳಿಸಿ ಸುಂದರ ತಾಣಗಳನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ತಿಳಿಸಿದರು.
ತಾಲ್ಲೂಕಿನ ಮೇಲುಕೋಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ನಿರಂತರ ಶ್ರಮ ಕಲ್ಯಾಣ ಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೇಲುಕೋಟೆ ದೇವಸ್ಥಾನ ರಾಜ್ಯದಲ್ಲಿಯೇ ಹೆಸರುವಾಸಿಯಾಗಿದೆ. ಹಾಗಾಗಿ ಪ್ರವಾಸಿಗರಿಗೆ ಮೂಲ ಸೌಕರ್ಯ ಒದಗಿಸಲು ಜಿಲ್ಲಾಡಳಿತ ಮುಂದಾಗಿದೆ. ಈ ಪ್ರಯತ್ನದಲ್ಲಿ ಜನರು ಸ್ವಯಂಪ್ರೇರಣೆಯಿಂದ ತೊಡಗಿಸಿಕೊಳ್ಳಬೇಕು. ಈ ಸೇವೆಯು ಶ್ರೀರಂಗಪಟ್ಟದ ರಂಗನಾಥಸ್ವಾಮಿ ದೇವಸ್ಥಾನ, ನಿಮಿಷಾಂಬ ದೇವಸ್ಥಾನ ಹಾಗೂ ಕರಿಘಟ್ಟಬೆಟ್ಟದ ದೇವಸ್ಥಾನಗಳಲ್ಲಿಯೂ ನಡೆಸಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಸಿ.ಜಯಣ್ಣ ಮಾತನಾಡಿ, ಹಿಂದೆ ವಾರದಲ್ಲೊಂದು ದಿನ ಜನರೇ ಬೀದಿ, ಚರಂಡಿ, ಕೆರೆ ಕಟ್ಟೆ ಸ್ವಚ್ಛ ಮಾಡಿಕೊಳ್ಳುತ್ತಿದ್ದರು. ಈಗ ಊರಿನ ಸಣ್ಣಪುಟ್ಟ ಕೆಲಸಗಳನ್ನು ಸರ್ಕಾರವೇ ಮಾಡಬೇಕಾದ ಪರಿಸ್ಥಿತಿಯಿದೆ ಎಂದು ಬೇಸರ ವ್ಯಕ್ತಪಡಿಸಿದರು.