ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದ ಶ್ರೀರಾಮಚಂದ್ರಪುರ ಮಠಕ್ಕೆ ಹಸ್ತಾಂತರ ಮಾಡಿರುವುದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಮೇ 27ರಂದು ನಡೆಸಲಿದೆ.
ಧಾರವಾಡದ ಸಂಚಾರಿ ಪೀಠದಲ್ಲಿ ಇದೇ ವಿವಾದಕ್ಕೆ ಸಂಬಂಧಿಸಿದಂತೆ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣವನ್ನು ಬೆಂಗಳೂರಿನ ಪ್ರಧಾನ ಪೀಠಕ್ಕೆ ವರ್ಗಾಯಿಸುವಂತೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಕೋರ್ಟ್ನ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದೆ.
2008ರ ಆಗಸ್ಟ್ 12ರಂದು ದೇವಾಲಯ ಹಸ್ತಾಂತರ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಬೆಂಗಳೂರಿನ ಪ್ರಧಾನ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಇತ್ಯರ್ಥಕ್ಕೆ ಬಾಕಿ ಇದೆ. ಅಂತೆಯೇ, ಗೋಕರ್ಣ ದೇವಾಲಯವು ಧಾರವಾಡದ ಸಂಚಾರಿ ಪೀಠದ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಕೆಲವರು ಅಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ವಿಚಾರಣೆಗೆ ಬಂದ ಹಿನ್ನೆಲೆಯಲ್ಲಿ, ಎಲ್ಲ ಅರ್ಜಿಗಳ ವಿಚಾರಣೆಯನ್ನೂ ಒಟ್ಟಿಗೇ ನಡೆಸಲಾಗುವುದು ಎಂದು ಪೀಠ ಹೇಳಿತು.