ಕಡೂರು: ನದಿ ಬತ್ತಿದರೆ ಮಳೆಯಿಂದ ತುಂಬಿಕೊಳ್ಳುತ್ತವೆ. ಆದರೆ ಮನುಷ್ಯನ ಮನಸ್ಸು ಬತ್ತಿದರೆ ಸಮಾಜ ಮತ್ತು ಸಂಸ್ಕೃತಿ ನಾಶವಾಗುತ್ತದೆ ಎಂದು ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಉಪನ್ಯಾಸಕ ಡಾ.ವಸಂತಕುಮಾರ್ ತಿಳಿಸಿದರು.
ಕಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡಾ ಚಟುವಟಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಮನಸ್ಸುಗಳು ಬತ್ತದ ರೀತಿಯಲ್ಲಿ ಉಪನ್ಯಾಸಕರು ನೋಡಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಾಗಬೇಕಾದರೆ ಕ್ರೀಡಾ ಚಟುವಟಿಕೆಗೂ ಒತ್ತು ನೀಡಬೇಕು ಎಂದರು.
ಶಾರೀರಿಕ, ಮಾನಸಿಕ, ಬೌದ್ಧಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯ ಎಂದು ಅವರು ಹೇಳಿದರು.
ಶಾಸಕ ಡಾ.ವೈ.ಸಿ.ವಿಶ್ವನಾಥ್ ಮಾತನಾಡಿ, ವೈಜ್ಞಾನಿಕ ಬೆಳವಣಿಗೆ ಹಾಗೂ ಸಂಶೋಧನೆಗಳ ಮೂಲಕ ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆ, ಮಾನಸಿಕ ಬೆಳವಣಿಗೆಗೆ ಪೂರಕವಾಗಬೇಕು ಎಂದು ಹೇಳಿದರು. ಪ್ರಾಚಾರ್ಯ ಜಿ.ಎಂ.ಕೊಟ್ರೇಶಪ್ಪ ಅಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಪ್ರೊ.ಎನ್. ವೆಂಕಟನರಸಯ್ಯ,ಕೆ.ಎನ್.ಲಕ್ಷ್ಮಿಕಾಂತ್, ನೂರ್ಆಯೇಷಾ ಮತ್ತಿತರರು ಇದ್ದರು.