ಬಳ್ಳಾರಿ: ಎಲೆ ಮರೆಯ ಕಾಯಿಯಂತೆ ಇರುವ ಕ್ರೀಡಾಪಟುಗಳು ಬೆಳಕಿಗೆ ಬರಬೇಕೆಂದರೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣವು ಪಠ್ಯವಾಗಿ ಜಾರಿ ಆಗಬೇಕಲ್ಲದೆ, ಪ್ರತಿ ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಕ್ರೀಡೆಯನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗೋನಾಳ್ ರಾಜಶೇಖರಗೌಡ ಅಭಿಪ್ರಾಯಪಟ್ಟರು.
ನಗರದಲ್ಲಿ ಮಂಗಳವಾರ ಬಳ್ಳಾರಿ ಪೂರ್ವ ವಲಯ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪುಸ್ತಕದ ಹುಳು ಗಳಾಗುವ ಬದಲು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಪಾಲ್ಗೊಂಡು ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಅಧ್ಯಕ್ಷೆ ಅರುಣಾ ತಿಪ್ಪಾರೆಡ್ಡಿ ಮಾತನಾಡಿ, ಕ್ರೀಡೆಯ ಅಭಿವೃದ್ಧಿಗೆ ಗಮನಹರಿಸುವಂತೆ ಎಲ್ಲ ಶಿಕ್ಷಣಾಧಿಕಾರಿ ಗಳಿಗೂ ಸೂಚಿಸಲಾಗಿದೆ. ದೈಹಿಕ ಶಿಕ್ಷಕರ ನೇಮಕಕ್ಕೆ ಆದ್ಯತೆ ನೀಡು ವಂತೆ ಮನವಿ ಮಾಡಲಾಗಿದೆ ಎಂದರು.
ಡಯಟ್ ಪ್ರಾಚಾರ್ಯ ಮರಿಮಾದ ನಾಯ್ಕ, ಶಿಕ್ಷಣಾಧಿಕಾರಿ ಅಂಥೋನಿ, ಯು. ಜಂಬಣ್ಣ ಉಪಸ್ಥಿತರಿದ್ದರು, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸರೆಡ್ಡಿ ಸ್ವಾಗತಿಸಿದರು. ಬಿ.ಜಿ. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು.