ಮಾನ್ವಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಸ್ಪರ್ಧಾ ಮನೋಭಾವ, ಮಾನಸಿಕ ಹಾಗೂ ದೈಹಿಕ ಸದೃಢತೆ ಮೂಡಿಸುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ದೇಶದ ಕೀರ್ತಿ ಹೆಚ್ಚಿಸುವ ಉತ್ತಮ ಕ್ರೀಡಾಪಟುಗಳನ್ನು ಬೆಳೆಸುವ ದೈಹಿಕ ಶಿಕ್ಷಣ ಶಿಕ್ಷಕರ ಸೇವೆ ಶ್ಲಾಘನೀಯ ಎಂದು ಗುಲ್ಬರ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಶಂಕರ್.ಎಚ್.ಬಟೂರ ಹೇಳಿದರು.
ಗುರುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಬಲವರ್ಧನೆ ಹಾಗೂ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಾಂಜನೇಯ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಸೋಮಲಿಂಗ ಜಿ.ಗೆಣ್ಣೂರು, ರಾಜ್ಯ ಸರ್ಕಾರಿ ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷ ಎ.ಬಾಲಸ್ವಾಮಿ ಕೊಡ್ಲಿ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಕೆ.ತಿಪ್ಪನಗೌಡ, ಜಿಲ್ಲಾ ವಿಷಯ ಪರಿವೀಕ್ಷಕ ಹನುಮಂತಪ್ಪ ಗವಾಯಿ, ಎಸ್.ಎಸ್.ದೊಡ್ಡಮನಿ, ಬಸವರಾಜ ಬೋರೆಡ್ಡಿ, ಬಸವರಾಜ ಮೂಲಿಮನಿ, ಅಲೀಸಾ ಮತ್ತಿತರರು ವೇದಿಕೆಯಲ್ಲಿದ್ದರು.ದೈ ಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೈ.ಸುರೇಂದ್ರಬಾಬು ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನಾಗಪ್ಪ ರೌಡಕುಂದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿರವಾರ ವಿ.ಆರ್. ಎಸ್ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಶಿಕ್ಷಕಿ ಸಂಗೀತಾ ಪ್ರಾರ್ಥಿಸಿದರು. ನಾಗೇಶ ನಾಗೋಲಿ ನಿರೂಪಿಸಿದರು. ವಿಶ್ವನಾಥ ವಂದಿಸಿದರು.