ಹೊಸಕೋಟೆ: `ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು~ ಎಂದು ಕಾರ್ಮಿಕ ಬಿ.ಎನ್. ಬಚ್ಚೇಗೌಡ ಸಲಹೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯು ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಬೆಂಗಳೂರು ವಿಭಾಗ ಮಟ್ಟದ ಹಾಕಿ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ರಾಜ್ಯ ಸರ್ಕಾರ ಕ್ರೀಡೆಗೆ ಅಧಿಕ ಪ್ರೋತ್ಸಾಹ ನೀಡಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು. ಇತ್ತೀಚೆಗೆ ಭಾರತ ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಗಳಲ್ಲಿ ತನ್ನದೇ ಛಾಪು ಮೂಡಿಸುತ್ತಿದೆ. ಹಾಗಾಗಿ ಯುವ ಜನತೆ ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ಮನೊಭಾವವನ್ನು ಬೆಳೆಸಿಕೊಳ್ಳಬೇಕು~ ಎಂದು ಅವರು ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಟಿ.ಎಸ್.ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ವಿ.ನಾರಾಯಣಸ್ವಾಮಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಉಪನಿರ್ದೇಶಕ ಎಚ್.ವಿ.ವೆಂಕಟೇಶಪ್ಪ, ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿ.ಜಯರಾಜ್ ಉಪಸ್ಥಿತರಿದ್ದರು.