ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯ ತಡೆಯಲು ವಿಫಲ: ಪ್ರತಿಭಟನೆ

Last Updated 5 ಡಿಸೆಂಬರ್ 2013, 6:45 IST
ಅಕ್ಷರ ಗಾತ್ರ

ಕೃಷ್ಣರಾಜಪೇಟೆ : ತಾಲ್ಲೂಕಿನ ದಲಿತರ ಭೂ ಸಾಗುವಳಿಗೆ ರಕ್ಷಣೆ ನೀಡಲು ಹಾಗೂ ದಲಿತರ ಮೇಲಿನ ದೌರ್ಜನ್ಯ ತಡೆಯಲು ತಾಲ್ಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ. ಕೃಷ್ಣಪ್ಪ ಬಣ) ತಾಲ್ಲೂಕು ಘಟಕದ ವತಿಯಿಂದ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಎಂ.ಕೆ. ಬೊಮ್ಮೇಗೌಡ ವೃತ್ತದಿಂದ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಗರ್‌ಹುಕುಂ ಸಾಗುವಳಿ ಅಕ್ರಮ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು. ಭೂಸುಧಾರಣಾ ಕಾಯ್ದೆಯನ್ವಯ ದಲಿತರಿಗೆ ಶೇ 50ರಂತೆ ಭೂಮಂಜೂರಾತಿ ನೀಡಬೇಕು. ದಲಿತರ ಕಾಲೊನಿಗಳಿಗೆ ಕುಡಿಯುವ ನೀರು, ಚರಂಡಿ, ರಸ್ತೆ, ವಿದ್ಯುತ್‌ ದೀಪ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು.

ವಿಶೇಷ ಘಟಕ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿನ ಸೌಲಭ್ಯಗಳು ಅರ್ಹ ದಲಿತ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತಾಗಲು ಅಧಿಕಾರಿಗಳು ಕ್ರಮ ವಹಿಸಬೇಕು. ತಾಲ್ಲೂಕಿನಲ್ಲಿ ದಲಿತರು ವಾಸ ಮಾಡುವ ಎಲ್ಲಾ ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿಯನ್ನು ಮಂಜೂರು ಮಾಡಬೇಕು. ತಾಲ್ಲೂಕಿನ ವಿವಿಧೆಡೆ ದಲಿತರನ್ನು ಅರಣ್ಯ ಇಲಾಖೆಯವರು ವಿನಾಕಾರಣ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದರ ವಿರುದ್ಧ ಕ್ರಮ ವಹಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪ್ರತಿಭಟನಾಕಾರರು ಮಂಡಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ವೆಂಕಟಗಿರಿಯಯ್ಯ, ಜಿಲ್ಲಾ ಸಂಚಾಲಕ ಸೋಮನಹಳ್ಳಿ ಅಂದಾನಿ, ತಾಲ್ಲೂಕು ಸಂಚಾಲಕ ಬಂಡಿಹೊಳೆ ರಮೇಶ್‌, ಮುಖಂಡರಾದ ಗಂಜಿಗೆರೆ ನರಸಿಂಹ, ಊಚನಹಳ್ಳಿ ನಟರಾಜ್‌ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT