ಬೆಂಗಳೂರು: ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಐದು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
‘ಅಕ್ಷರ ದಾಸೋಹ ನೌಕರರಿಗೆ ಸರ್ಕಾರ ಹೆಚ್ಚುವರಿ ₨ 500 ನೀಡಲು ನಿರ್ಧರಿಸಿದೆ. ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ’ ಎಂದು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮೀ ತಿಳಿಸಿದ್ದಾರೆ.
ಕನಿಷ್ಠ ಮೂರು ಸಾವಿರ ವೇತನ ನಿಗದಿಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಈಗ ಹೆಚ್ಚುವರಿಯಾಗಿ ಕೇವಲ ₨ 500 ಮಾತ್ರ ನೀಡುವುದಾಗಿ ಹೇಳಿದೆ. ಇದರಿಂದ ಸಂತಸ ಇಲ್ಲದಿದ್ದರೂ ನಮ್ಮ ಹೋರಾಟಕ್ಕೆ ಸಣ್ಣ ಜಯ ಸಿಕ್ಕಂತಾಗಿದೆ.
ಅಲ್ಲದೇ, ಜನವರಿ ತಿಂಗಳಲ್ಲಿ ಮುಖ್ಯಮಂತ್ರಿಗಳು ಜಂಟಿ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸುವುದಾಗಿ ಮತ್ತು ಬಜೆಟ್ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಆ ನಂತರವೂ ಪರಿಹಾರ ಸಿಗದಿದ್ದರೆ ಹೋರಾಟ ಮುಂದುವರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.