ಬಳ್ಳಾರಿ: ಮಹಾನಗರ ಪಾಲಿಕೆಯು ನಗರದ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಗಡಿಗಿ ಚನ್ನಪ್ಪ ವೃತ್ತದ ಎದುರು ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು, ಪಾಲಿಕೆ ಆಡಳಿತವು ಕೂಡಲೇ ನಗರದ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ವಾಯುಮಾಲಿನ್ಯ, ಸ್ವಚ್ಛತೆಯ ಕೊರತೆಯಿಂದಾಗಿ ಜನತೆ ಶ್ವಾಸಕೋಶದ ತೊಂದರೆಯಿಂದ ಬಳಲುವಂತಾಗಿದೆ. ಅಲ್ಲದೆ, ಸೊಳ್ಳೆಗಳ ಸಂಖ್ಯೆಯೂ ಹೆಚ್ಚುತ್ತ ಸಾಂಕ್ರಾಮಿಕ ರೋಗಗಳು ಹರಡುವಂತಾಗಿದ್ದು, ಸಾವಿರಾರು ಜನ ನಿತ್ಯವೂ ಆಸ್ಪತ್ರೆಗೆ ಎಡತಾಕುವಂತಾಗಿದೆ ಎಂದು ಸಮಿತಿಯ ಡಿ. ನಾಗಲಕ್ಷ್ಮಿ, ಆರ್. ಸೋಮಶೇಖರಗೌಡ ಮತ್ತಿತರರು ದೂರಿದರು.
ಮಕ್ಕಳು, ಮಹಿಳೆಯರು, ವೃದ್ಧರಾದಿಯಾಗಿ ಬಹುತೇಕ ನಾಗರಿಕರು ಸಾಂಕ್ರಾಮಿಕ ಕಾಯಿಲೆಗೆ ಈಡಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವಂತಾಗಿದೆ. ಸೊಳ್ಳೆಗಳನ್ನು ನಿಯಂತ್ರಿಸುವ ಮೂಲಕ ಕಾಯಿಲೆ ಹರಡದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಲಾಯಿತು.
ನಗರದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಿಸಬೇಕು, ಚರಂಡಿ ಸ್ವಚ್ಛಗೊಳಿಸಬೇಕು, ಡೆಂಗೆ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ಕಾಯಿಲೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು, ಜನರಲ್ಲಿ ಸೊಳ್ಳೆಗಳ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಂಡು, ದೂಳು ಏಳದಂತೆ ಮಾಡಬೇಕು ಎಂದು ಆಗ್ರಹಿಸಿ ಪಾಲಿಕೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.