ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರೀಕರಣ: ರಾಜ್ಯಕ್ಕೆ 4ನೇ ಸ್ಥಾನ

Last Updated 25 ಜನವರಿ 2011, 11:15 IST
ಅಕ್ಷರ ಗಾತ್ರ

ಮಂಗಳೂರು: ನಗರೀಕರಣ ಪ್ರಕ್ರಿಯೆಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಈಗ 4ನೇ ಸ್ಥಾನದಲ್ಲಿದ್ದು, 2050ರ ವೇಳೆಗೆ ರಾಜ್ಯದ ಶೇ. 50ರಷ್ಟು ಭೂಭಾಗ ನಗರೀಕರಣ ವ್ಯಾಪ್ತಿಗೆ ಸೇರುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಎನ್.ವಿಜಯಪ್ರಕಾಶ್ ತಿಳಿಸಿದರು.

ಪಾಲಿಕೆ ಸಭಾಂಗಣದಲ್ಲಿ ಸೋಮವಾರ ನಗರ ನೈರ್ಮಲ್ಯೀಕರಣ ಯೋಜನೆ ಕುರಿತು ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಗರ ನೈರ್ಮಲ್ಯ ಯೋಜನೆ(ಸಿಎಸ್‌ಪಿ) ರೂಪಿಸಲಾಗಿದ್ದು ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿವಿಧ ನಗರಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿವೆ ಎಂದರು.

ಸಿಎಸ್‌ಪಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜಾರಿಗೆ ತಂದಿಲ್ಲ. ಬದಲಿಗೆ ನೈರ್ಮಲ್ಯ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳು, ಜನಜಾಗೃತಿ ಇದರಲ್ಲಿ ಸೇರಿವೆ. ಈಗಾಗಲೇ ಪಾಲಿಕೆಯಿಂದ ನಗರ ನೈರ್ಮಲ್ಯ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆ ನೇತೃತ್ವದಲ್ಲಿ ವಿವಿಧ ಆರೋಗ್ಯ ಜಾಗೃತಿ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದರು.

ಬಯಲು ಮಲ ವಿಸರ್ಜನಾಮುಕ್ತ ನಗರಗಳನ್ನಾಗಿ ಘೋಷಿಸಲು ಈ ಯೋಜನೆ ಸಹಕಾರಿಯಾಗಿದ್ದು, ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಘನ ತ್ಯಾಜ್ಯ ನಿರ್ವಹಣೆಗೆ ಇತ್ತೀಚೆಗೆ ಹೊಸದಾಗಿ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದ ಆಯುಕ್ತ ವಿಜಯಪ್ರಕಾಶ್, ನಗರ ನೈರ್ಮಲೀಕರಣ ಯೋಜನೆ ಯಶಸ್ವಿಯಾಗಲು ಸಾರ್ವಜನಿಕರ ಜತೆ ಜನಪ್ರತಿನಿಧಿಗಳೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಾಗಾರ ಉದ್ಘಾಟಿಸಿದ ಮೇಯರ್ ರಜನಿ ದುಗ್ಗಣ್ಣ, ನೈರ್ಮಲ್ಯ ಕಾಪಾಡಲು ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಹೈದರಾಬಾದ್‌ನ ಭಾರತೀಯ ಮಹಾವಿದ್ಯಾಲಯ(ಅಸ್ಕಿ)ದ ಸಂಪನ್ಮೂಲ ವ್ಯಕ್ತಿ ಸೀಮಾ, ನಗರ ನಿರ್ಮಲೀಕರಣ ನೀತಿಯ ಯಶಸ್ವಿ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಕ್ರಮಗಳನ್ನು ವಿವರಿಸಿದರು.ಉಪ ಮೇಯರ್ ರಾಜೇಂದ್ರ ಕುಮಾರ್, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ. ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT