ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟರಾಜ್ ಕೊಲೆ ಪ್ರಕರಣ: 7 ಜನರ ಬಂಧನ

Last Updated 8 ಅಕ್ಟೋಬರ್ 2011, 19:50 IST
ಅಕ್ಷರ ಗಾತ್ರ

ಬೆಂಗಳೂರು: ನಗರವನ್ನು ತಲ್ಲಣಗೊಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗಾಂಧಿನಗರ ವಾರ್ಡ್ ಸದಸ್ಯ ಎಸ್.ನಟರಾಜ್ (45) ಅವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

`ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ~ ಎಂದು ಉನ್ನತ ಪೊಲೀಸ್ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.

`ರಾಜೇಂದ್ರ, ಮಹೇಶ, ಸೀನ, ವಿಜಯ್‌ಕುಮಾರ್ ಎಂಬುವರು ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಮಹಿಳೆಯೊಬ್ಬರು ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಗೊತ್ತಾಗಿದೆ. ನಟರಾಜ್ ಅವರ ಜತೆಯೇ ಕೆಲಸ ಮಾಡಿಕೊಂಡಿದ್ದ ರಾಜೇಂದ್ರ ಇಡೀ ಪ್ರಕರಣದ ಸಂಚು ರೂಪಿಸಿದ್ದ~ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

`ರಾಜಕೀಯವಾಗಿ ಸಾಕಷ್ಟು ಹೆಸರು ಮಾಡಿದ್ದ ನಟರಾಜ್ ಅವರ ಏಳಿಗೆಯನ್ನು ಸಹಿಸದೆ ಅವರನ್ನು ಕೊಲೆ ಮಾಡಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಮಹೇಶ ಮತ್ತು ನಟರಾಜ್ ಅವರ ನಡುವೆ ಹಣಕಾಸು ವಿಷಯವಾಗಿ ಕೆಲ ದಿನಗಳ ಹಿಂದೆ ಜಗಳವಾಗಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಕಾರಣಕ್ಕಾಗಿ ಆರೋಪಿಗಳು ಅವರನ್ನು ಕೊಲೆ ಮಾಡಿರುವ ಸಾಧ್ಯತೆಯೂ ಇದೆ~ ಎಂದು ಅವರು ತಿಳಿಸಿದ್ದಾರೆ.

`ಪ್ರಕರಣದಲ್ಲಿ ಪಾಲಿಕೆಯ ಮಾಜಿ ಸದಸ್ಯರೊಬ್ಬರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ. ಆರೋಪಿಗಳು ಬಿಟ್ಟು ಹೋಗಿದ್ದ ಕಾರಿನಲ್ಲಿ ಪತ್ತೆಯಾಗಿರುವ ಮೊಬೈಲ್ ಫೋನ್‌ನಿಂದ ಹೊರ ಹೋಗಿರುವ ಕರೆಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೊಲೆ ಘಟನೆ ನಡೆಯುವುದಕ್ಕೂ ಮುನ್ನ ಆರೋಪಿಗಳು ಆ ಮೊಬೈಲ್‌ನಿಂದ ಒಂದು ತಾಸಿನ ಅಂತರದಲ್ಲಿ ನೂರಕ್ಕೂ ಹೆಚ್ಚು ಕರೆಗಳನ್ನು ಮಾಡಿದ್ದರು~ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೆಲಸದ ನಿಮಿತ್ತ ಅ.1ರಂದು ದ್ವಿಚಕ್ರ ವಾಹನದಲ್ಲಿ ಮಲ್ಲೇಶ್ವರ ಮಾರುಕಟ್ಟೆ ಕಡೆಗೆ ಹೋಗುತ್ತಿದ್ದ ನಟರಾಜ್ ಅವರನ್ನು ಆರೋಪಿಗಳು ರಸ್ತೆ ಮಧ್ಯೆ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT