ಮಡಿಕೇರಿ: ನಲಿ-ಕಲಿ ಯೋಜನೆ ರಾಷ್ಟ್ರದಲ್ಲಿಯೇ ಮಾದರಿ ಕಲಿಕಾ ಕಾರ್ಯಕ್ರಮ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಣ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಕಾರ್ಯಕ್ರಮವನ್ನು ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು 7ನೇ ತರಗತಿಯವರೆಗೂ ವಿಸ್ತರಿಸಲು ಚಿಂತನೆ ನಡೆದಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರಿಗೆ ತರಬೇತಿ, 1, 2 ಮತ್ತು 3ನೇ ತರಗತಿ ಮಕ್ಕಳಿಗೆ ನಲಿ-ಕಲಿ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಇಲ್ಲ. ಆದರೆ, ಇಡೀ ರಾಜ್ಯದ ಅನುಪಾತ ಗಮನಿಸಿದರೆ ಶಿಕ್ಷಕರ ಕೊರತೆ ಇದ್ದು, ಇದನ್ನು ನೀಗಿಸಲು ಸದ್ಯವೇ 4400 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲಾಗುವುದು.
ರಾಜ್ಯದಲ್ಲಿ ಶಿಕ್ಷಕರಿಗೆ ವರ್ಷದಲ್ಲಿ 20 ದಿನ ಮಾತ್ರ ತರಬೇತಿ ನೀಡಲಾಗುತ್ತಿದೆ. ರಾಷ್ಟ್ರದಲ್ಲಿ ಹೋಲಿಕೆ ಮಾಡಿದರೆ ಈ ತರಬೇತಿ ಕಡಿಮೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ದಿವಾಕರ, ನೋಡಲ್ ಅಧಿಕಾರಿ ಜೋಸೆಫ್, ಮೈಸೂರು ವಿಭಾಗದ ಜಂಟಿ ನಿರ್ದೇಶಕ ಕುಮಾರಸ್ವಾಮಿ, ಉಪ ನಿರ್ದೇಶಕ ಎನ್.ಎ. ರಾಮಸ್ವಾಮಿ ಇದ್ದರು.