ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಿಕ ಪ್ರಜ್ಞೆಯಿಂದ ರಾಜಕೀಯ ಅರಿವು

Last Updated 22 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಜಾತಿ ಹಾಗೂ ಹಣ ಬಲ ಹೊಂದಿರುವವರನ್ನು ಚುನಾವಣೆಯಲ್ಲಿ ಆಯ್ಕೆ ಮಾಡದಂತೆ ಜನರಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ~ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಕರೆ ನೀಡಿದರು.

ಬೆಂಗಳೂರು ವಿಶ್ವವಿದ್ಯಾಲಯವು ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಂಗಳೂರು ನಾಗರಿಕ ಪ್ರಜ್ಞೆ ದಿನ ಕುರಿತ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

`ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಂಡರೆ ರಾಜಕೀಯ ಅರಿವು ಸಹ ಮೂಡಲಿದೆ. ಭ್ರಷ್ಟಾಚಾರ ಎಂಬುದು ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ. ಇದನ್ನು ತಡೆಗಟ್ಟಲು ಯತ್ನಿಸುವ ಪ್ರಾಮಾಣಿಕ ಅಧಿಕಾರಿಗಳನ್ನು ವರ್ಗಾಯಿಸುವುದು ದುರದೃಷ್ಟಕರ~ ಎಂದರು.

`ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ದನಿಯೆತ್ತಿದಾಗ ಕೆಲವರು ನನ್ನನ್ನು ರಾಜಕಾರಣಿ ಎಂದು ನಿಂದಿಸಿದರು. ಹೌದು. ಈ ಸ್ಥಾನಕ್ಕೆ ಬರುವ ಮುನ್ನ ನಾನು ರಾಜಕಾರಣಿಯೇ~ ಎಂದು ತಿರುಗೇಟು ನೀಡಿದರು.

`ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದಾಗಲೂ ಹಲವೆಡೆ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸರ್ಕಾರದ ಮುಖ್ಯಸ್ಥರ ವಿರುದ್ಧ ಈ ರೀತಿ ಪ್ರತಿಭಟನೆ ನಡೆಸುವುದು ಸರಿಯೇ~ ಎಂದರು.

ಬಿಬಿಎಂಪಿ ವಿಫಲ: `ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪಾಲಿಕೆ ವಿಫಲವಾಗಿದೆ. ಈ ಬಗ್ಗೆ ಪಾಲಿಕೆ ಆಯುಕ್ತರನ್ನು ಪ್ರಶ್ನಿಸಿದಾಗ ಹಣದ ಕೊರತೆ ಇರುವುದಾಗಿ ತಿಳಿಸಿದರು. ಈ ಸಂಬಂಧ ಸರ್ಕಾರದೊಂದಿಗೆ ಚರ್ಚಿಸುತ್ತೇನೆ~ ಎಂದರು.

`ಮೆಟ್ರೊ ರೈಲು ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಯೋಜನಾ ಆಯೋಗವು ಹಣ ಬಿಡುಗಡೆ ಮಾಡಿದ್ದು, ಸಮರ್ಪಕ ಬಳಕೆಗೆ ಮುಂದಾಗಬೇಕು~ ಎಂದು ಹೇಳಿದರು.

ಜನಾಗ್ರಹ ಸಂಸ್ಥೆಯ ಸಹ ಸಂಸ್ಥಾಪಕ ರಮೇಶ್ ರಾಮನಾಥನ್, `ಬೆಂಗಳೂರಿನ ಸಮಸ್ಯೆಗಳಿಗೆ ಬಿಬಿಎಂಪಿ ಅಥವಾ ಇತರೆ ಸಂಸ್ಥೆಯನ್ನು ನಿಂದಿಸುವುದು ಸರಿಯಲ್ಲ. ವ್ಯವಸ್ಥೆಯ ಸುಧಾರಣೆಗೆ ಎಲ್ಲರೂ ಕೈಜೋಡಿಸಬೇಕು. ಆ ಹಿನ್ನೆಲೆಯಲ್ಲಿ ಈ ಅಭಿಯಾನ ಆರಂಭಿಸಲಾಗಿದೆ.
 
ಬೆಂಗಳೂರು ವಿ.ವಿ ಆರಂಭಿಸಲಿರುವ ನಾಗರಿಕ ಪ್ರಜ್ಞೆ ಕುರಿತ ವಿಷಯಕ್ಕೆ ಪಠ್ಯ ಹಾಗೂ ಇತರೆ ಪೂರಕ ಮಾಹಿತಿಯನ್ನು ಸಂಸ್ಥೆ ಜನವರಿ ವೇಳೆಗೆ ನೀಡಲಿದೆ~ ಎಂದರು. ಬೆಂಗಳೂರು ವಿ.ವಿ ಕುಲಪತಿ ಡಾ.ಎನ್. ಪ್ರಭುದೇವ, ಕುಲಸಚಿವ ಡಾ.ಎನ್. ರಂಗಸ್ವಾಮಿ, ಕುಲಸಚಿವ (ಮೌಲ್ಯಮಾಪನ) ಡಾ.ಟಿ.ಆರ್. ಸುಬ್ರಮಣ್ಯ ಉಪಸ್ಥಿತರಿದ್ದರು.

ಸ್ವಯಂಪ್ರೇರಿತ ಕ್ರಮವಿಲ್ಲ

`ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ನಾನು ಯಾವುದೇ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವುದಿಲ್ಲ~ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಪ್ರತಿಕ್ರಿಯಿಸಿದರು. `ಯೋಗೀಶ್ವರ್ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡರೆ ಬಳಿಕ ನನ್ನ ವ್ಯಾಪ್ತಿಯಲ್ಲಿನ ಪ್ರಕ್ರಿಯೆಯನ್ನು ವಿಳಂಬ ಮಾಡದೇ ನಿರ್ವಹಿಸುತ್ತೇನೆ~ ಎಂದರು.

ರಾಜ್ಯ ಮಾಹಿತಿ ಆಯುಕ್ತ ಎಚ್.ಎನ್. ಕೃಷ್ಣ ಅವರ ಜಾಮೀನು ಅರ್ಜಿ ವಜಾಗೊಂಡಿದ್ದರೂ ಸೇವೆಯಲ್ಲಿ ಮುಂದುವರಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, `ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಗಮನ ಹರಿಸಲಾಗುವುದು~ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT